News Karnataka Kannada
Sunday, April 28 2024
ಬೆಂಗಳೂರು

 ರೆಸಾರ್ಟ್ ನಲ್ಲಿ ಇಂದು ಜೆಡಿಎಸ್ ಶಾಸಕಾಂಗ ಸಭೆ

Untitled 1
Photo Credit :

 ಬೆಂಗಳೂರು: ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಂಚರತ್ನ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಜೆಡಿಎಸ್‍ ಇಂದು ಸಂಜೆ ಶಾಸಕಾಂಗ ಸಭೆ ಕರೆದಿದೆ.

ದೇವನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್​​ನಲ್ಲಿಂದು ಸಂಜೆ 6 ಗಂಟೆಗೆ ಸಭೆ ಕರೆಯಲಾಗಿದ್ದು, ಶಾಸಕರು, ಮಾಜಿ ಶಾಸಕರು, ಚುನಾವಣಾ ಆಕಾಂಕ್ಷಿಗಳನ್ನು ಆಹ್ವಾನಿಸಲಾಗಿದೆ.

ಜೆಡಿಎಸ್‍ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಸಭೆಯಲ್ಲಿ ದೇವೇಗೌಡರ ಹುಟ್ಟುಹಬ್ಬ ಆಚರಣೆ ಮಾಡಲಿದ್ದಾರೆ.

ವಿಧಾನಸಭೆಯಲ್ಲಿ 32 ಜೆಡಿಎಸ್ ಶಾಸಕರಿದ್ದು, ವಿಧಾನಪರಿಷತ್​ನ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಆದರೆ ರಾಜ್ಯಸಭೆಯ ಒಂದು ಸ್ಥಾನ ಗೆಲ್ಲಲು ಕಾಂಗ್ರೆಸ್ ಅಥವಾ ಬಿಜೆಪಿಯ ನೆರವು ಪಡೆಯಬೇಕಾಗುತ್ತದೆ. ಎರಡೂ ರಾಷ್ಟ್ರೀಯ ಪಕ್ಷಗಳು ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಪಕ್ಷದ ಅಭ್ಯರ್ಥಿ ಆಯ್ಕೆಗೆ ಯಾವ ಕಾರ್ಯತಂತ್ರ ಅನುಸರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.

ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ಮತ್ತೆ ರಾಜ್ಯಸಭೆ ಚುನಾವಣಾ ಕಣಕ್ಕಿಳಿಸುವ ಉದ್ದೇಶವನ್ನು ಪಕ್ಷ ಹೊಂದಿದೆ.

ಮೇಲ್ಮನೆ ಸ್ಥಾನಕ್ಕೆ ಹಾಲಿ ಇಬ್ಬರು ಪರಿಷತ್ ಸದಸ್ಯರು ಸೇರಿದಂತೆ ಹಲವರ ಹೆಸರು ಪ್ರಸ್ತಾಪವಾಗುತ್ತಿದೆ. ಆದರೆ ಇದುವರೆಗೂ ಅಭ್ಯರ್ಥಿ ಆಯ್ಕೆ ಕುರಿತಂತೆ ಯಾವುದೇ ಚರ್ಚೆ ಪಕ್ಷದ ವೇದಿಕೆಯಲ್ಲಿ ನಡೆದಿಲ್ಲ. ಸಭೆಯ ನಂತರ ಒಂದೆರಡು ದಿನಗಳಲ್ಲಿ ಕೋರ್‌ ಕಮಿಟಿ ಸಭೆ ನಡೆಸಿ ಚುನಾವಣೆಗಳಿಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುತ್ತದೆ.

ಜೆಡಿಎಸ್ ಸೇರ್ಪಡೆಗೊಂಡು ರಾಜ್ಯಾಧ್ಯಕ್ಷರಾಗಿರುವ ಸಿ.ಎಂ.ಇಬ್ರಾಹಿಂ, ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ನಡೆಯುವ ಚುನಾವಣೆಯಲ್ಲಿ ತಮ್ಮನ್ನು ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರು ಈ ಹುದ್ದೆಗೆ ಬೇಡಿಕೆ ಇಟ್ಟಿರುವುದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕಗ್ಗಂಟಾಗಿ ಪರಿಣಮಿಸಿದೆ.

ಆದರೆ ಇಬ್ರಾಹಿಂ ಅವರ ಬೇಡಿಕೆಗೆ ಜೆಡಿಎಸ್ ವರಿಷ್ಠರು ಸಮ್ಮತಿಸುವುದು ಕಷ್ಟ. ಕಾರಣ, ಒಬ್ಬರಿಗೆ ಎರಡು ಹುದ್ದೆ ಕೊಡಲು ಆಗುವುದಿಲ್ಲ. ಮತ್ತೊಂದೆಡೆ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ ಹೊಸ ಮುಖಗಳಿಗೆ ಮಣೆ ಹಾಕಬೇಕೆಂಬ ದೃಷ್ಟಿಯಿಂದ ಎರಡನೇ ಬಾರಿಗೆ ಶರವಣ ಅವರನ್ನು ಆಯ್ಕೆ ಮಾಡಲು ಕುಮಾರಸ್ವಾಮಿ ಅವರಿಗೆ ಒಲವಿಲ್ಲ ಎಂಬ ಮಾತುಗಳು ಜೆಡಿಎಸ್‍ ವಲಯದಲ್ಲಿ ಕೇಳಿಬರುತ್ತಿದೆ. ಒಟ್ಟಾರೆ, ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆ ಮಹತ್ವ ಪಡೆದುಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು