ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಲಿಕಾ ಕೊರತೆ ಸರಿದೂಗಿಸಲು ಈ ಬಾರಿ 15 ದಿನ ಮೊದಲೇ ಅಂದರೆ ಮೇ. 16 ರಿಂದಲೇ ಶಾಲೆ ಆರಂಭಿಸಿ, ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಸಲು ಸಜ್ಜಾಗಿದೆ.
ವಿಧಾನಪರಿಷತ್ ಜೆಡಿಎಸ್ ಸದಸ್ಯ ಬೋಜೇಗೌಡ ಸೇರಿದಂತೆ ಕೆಲ ಮೇಲ್ಮನೆ ಸದಸ್ಯರು ಈ ಬಾರಿ ಬಿಸಿಲ ಬೇಗೆಯ ತಾಪಪಾನ ಹೆಚ್ಚಾಗಿದ್ದು, ಶಾಲೆಗಳನ್ನು ಒಂದು ತಿಂಗಳು ಕಾಲ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಹುಟ್ಟುಹಾಕಿದೆ.
ಶಾಲೆ ಆರಂಭದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಲೆ ರಜೆ ವಿಸ್ತರಣೆ ಮಾಡಬೇಕು ಎಂಬ ಬಗ್ಗೆ ಕೆಲ ಶಾಸಕರು ಆಗ್ರಹ ಮಾಡಿದ್ದಾರೆ ಎಂಬ ಮಾಹಿತಿ ಬಂದಿದೆ. ಆದರೆ ಈ ಬಾರಿ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಿ 15 ದಿನ ಮೊದಲೇ ಶಾಲೆ ಆರಂಭಿಸಲು ನಿರ್ಧರಿಸಲಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.