ಬೆಳಗಾವಿ: ‘ಹೈಕಮಾಂಡ್ ನಿಂದ ಸಂಜೆಯೊಳಗೆ ಸಂದೇಶ ಬರಬಹುದು, ಬಂದ ಕೂಡಲೇ ನಿಮಗೂ ಹೇಳುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದೆ, ಎಲ್ಲೆಲ್ಲಿ ಏನೇನು ಆಗಿದೆ, ಆಸ್ತಿಪಾಸ್ತಿ, ಜನರಿಗೆ ಆಗಿರುವ ಸಂಕಷ್ಟ, ನಷ್ಟ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದೇನೆ, ನನ್ನ ಜೊತೆ ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳು ಇದ್ದಾರೆ ಎಂದರು.
ಬೆಳಗಾವಿಯ ಹಾನಿಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮೊದಲು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಿಂದ ಸಂದೇಶ ಬಂದ ಮೇಲೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
‘ದಲಿತ ನಾಯಕ ಸಿಎಂ ಆಗಲಿದ್ದಾರೆಯೇ ಎಂದು ಕೇಳಿದ್ದಕ್ಕೆ ಮುಂದಿನ ಸಿಎಂ ಯಾರಾಗಬೇಕೆಂದು ನಿರ್ಧಾರ ಮಾಡುವುದು ನಾನಲ್ಲ, ಹೈಕಮಾಂಡ್. ಸ್ವಾಮೀಜಿಗಳು ಕೂಡ ನನ್ನ ಪರ ಸಮಾವೇಶ ಮಾಡುವ ಅಗತ್ಯವಿಲ್ಲ ಎಂದರು. ಪ್ರಧಾನಿ ಮೋದಿ, ಅಮಿತ್ ಶಾ, ರಾಷ್ಟ್ರಾಧ್ಯಕ್ಷ ನಡ್ಡಾ ಅವರ ಮೇಲೆ ನನಗೆ ನಂಬಿಕೆಯಿದೆ’ ಎಂದರು.