ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ನ ಸದಸ್ಯರು ಸದನದಲ್ಲಿ ಕೆಲಕಾಲ ಧರಣಿ ನಡೆಸಿದರು.
ಶಾಸಕ ಸಾ.ರಾ.ಮಹೇಶ್ ಹಕ್ಕುಚ್ಯುತಿ ಪ್ರಸ್ತಾವನೆಗೆ ಅವಕಾಶ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದರು. ಬುಧವಾರ ಶೂನ್ಯವೇಳೆ ಬಳಿಕ ವಿಷಯ ಪ್ರಸ್ತಾಪಿಸಿದ ಸಾ.ರಾ.ಮಹೇಶ್, ಬ್ಯಾಗ್ ಖರೀದಿ ಸೇರಿದಂತೆ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಗಳು ದೊಡ್ಡಮಟ್ಟದಲ್ಲಿ ಹಣ ದುರುಪಯೋಗ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ ಎಂದು ಹೇಳಿದರು .
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಅಥವಾ ಶುಕ್ರವಾರ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದರು.
ಇದಕ್ಕೆ ಒಪ್ಪದ ಮಹೇಶ್ ಬಾವಿಗಿಳಿದು ಧರಣಿ ಆರಂಭಿಸಿದರು. ಅವಕಾಶ ನೀಡುವುದಾಗಿ ಹೇಳಿದ್ದರೂ ಜೆಡಿಎಸ್ ಸದಸ್ಯರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್ ಹೇಳಿದ ಬಳಿಕ ಧರಣಿ ಕೈಬಿಟ್ಟರು.