ಬೆಂಗಳೂರು : ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಪ್ರಚಾರ ಕೈಗೊಂಡರು. ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರಲ್ಲದೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈದರು. ಇದರಿಂದ ಚುನಾವಣಾ ಪ್ರಚಾರದ ಕಾವು ತಾರಕಕ್ಕೇರಿದಂತಾಯಿತು.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಳೆದ ಮೂರು ದಿನಗಳಿಂದ ಸಿಂಧಗಿ ಕ್ಷೇತ್ರದಲ್ಲಿ ಬೀಡು ಬಿಟ್ಟಿದ್ದು, ಜೆಡಿಎಸ್ ಅಭ್ಯರ್ಥಿ ಅಂಗಡಿ ನಾಜಿಯಾ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ಮಾಡುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಮನಗೂಳಿ ಪರವಾಗಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿ ಮತಯಾಚನೆ ಮಾಡಿದರು.
ಬಿಜೆಪಿ ಅಭ್ಯರ್ಥಿ ಬೂಸನೂರ ರಮೇಶ್ ದಾಳಪ್ಪ ಅವರ ಪರವಾಗಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು, ಸಚಿವರು ಚುನಾವಣಾ ಪ್ರಚಾರ ಕೈಗೊಂಡರು. ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ನಾಯಕರು ಸಿಂಧಗಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಇಳಿದ ಹಿನ್ನೆಲೆಯಲ್ಲಿ ಚುನಾವಣಾ ಅಖಾಡ ರಂಗೇರತೊಡಗಿದೆ.
ಮೂರೂ ಪಕ್ಷಗಳು ಈ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದ, ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಸಭೆ-ಸಮಾರಂಭ ನಡೆಸುವುದಲ್ಲದೆ ಅಭ್ಯರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಕಾರ್ಯತಂತ್ರ ರೂಪಿಸಿ ಮತದಾರರನ್ನು ಆಕರ್ಷಿಸುವ ಪ್ರಯತ್ನ ನಡೆಸುತ್ತಿದೆ.
ಈ ನಡುವೆ ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತ ಮತದಾರರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ಮುಂದುವರೆಸಿದ್ದಾರೆ.