ಬೆಂಗಳೂರು, -ನಗರದಲ್ಲಿ ಕೊರೊನಾ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಇಂದಿಲ್ಲಿ ತಿಳಿಸಿದರು. 75ನೆ ಸ್ವಾತಂತ್ರ್ಯ ದಿನಾಚರಣೆ ಸ್ಮರಣಾರ್ಥ ನಗರದಾದ್ಯಂತ 75 ಸಾವಿರ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಫ್ರೀಡಂಪಾರ್ಕ್ನಲ್ಲಿಂದು ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಗರದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಮಕ್ಕಳಲ್ಲೂ ಸೋಂಕು ಜಾಸ್ತಿಯಾಗಿಲ್ಲ. ಸೋಂಕು ಹೆಚ್ಚಳಗೊಳ್ಳದಂತೆ ನೋಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಸಾರ್ವಜನಿಕರಿಗೆ ವ್ಯಾಕ್ಸಿನ್ ಸಿಗುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದಿಂದ ಲಭ್ಯವಿರುವ ವ್ಯಾಕ್ಸಿನ್ಗಳನ್ನು ಅವಶ್ಯವಿರುವವರಿಗೆ ಹಾಕಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ನಗರದಲ್ಲಿ ಕೊರೊನಾ ನಿಯಂತ್ರಣದಲ್ಲಿರುವುದರಿಂದ ಸದ್ಯ ವೀಕೆಂಡ್ ಕಫ್ರ್ಯೂ, ಲಾಕ್ಡೌನ್ ಮಾಡುವ ಪ್ರಸ್ತಾವನೆ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ವೀಕೆಂಡ್ ಕಫ್ರ್ಯೂ ಮಾಡಬೇಕೆ, ಬೇಡವೆ ಎಂಬ ಬಗ್ಗೆ ತಜ್ಞರು ನೀಡುವ ಸಲಹೆ ಮೇರೆಗೆ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಅವರು ಹೇಳಿದರು.