ಬೆಂಗಳೂರು: ವನ್ಯಜೀವಿ ಸಂರಕ್ಷಣೆ ಅಡಿ ಹುಲಿ ಉಗುರು, ಹುಲಿ ಚರ್ಮ ಸೇರಿದಂತೆ ವನ್ಯಜೀವಿ ಅಂಗಾಂಗ ಹಿಂದಿರುಗಿಸಲು 3 ತಿಂಗಳ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.
ಯಾವುದೇ ವನ್ಯಜೀವಿಯ ಅಂಗಾಂಗವನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ಸಾಗಾಟ ಮಾಡುವುದು, ಮನೆಯಲ್ಲಿ ಇಟ್ಟುಕೊಳ್ಳುವುದು, ಮಾರಾಟ ಮಾಡುವುದು, ಧರಿಸುವುದು, ವನ್ಯಜೀವಿಗಳ ಮಾಂಸ ಭಕ್ಷಿಸುವುದು ಶಿಕ್ಷಾರ್ಹ ಅಪರಾಧವಾಗಿದೆ.
ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ, ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಳ್ಳಲಾಗಿದೆ.
ವನ್ಯಜೀವಿ (ಸಂರಕ್ಷಣಾ) (ಕರ್ನಾಟಕ ನಿಯಮಗಳು) 1973 ರ ನಿಯಮ 34 (1) ರಡಿಯಲ್ಲಿ ನಿಯಮ ಜಾರಿಯಾದ ಸಂದರ್ಭದಲ್ಲಿ 1973ರಲ್ಲಿ 30 ದಿನಗಳ ಕಾಲ ನಂತರ 2003 ರಲ್ಲಿ ಮತ್ತೊಮ್ಮೆ 180 ದಿನಗಳ ಕಾಲಾವಕಾಶ ನೀಡಿದ್ದ ಸರ್ಕಾರ, ತಲತಲಾಂತರದಿಂದ ತಮ್ಮಲ್ಲಿರುವ ವನ್ಯಜೀವಿ/ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಅಥವಾ ಸಂಸ್ಕರಿಸದ ಟ್ರೋಫಿಗಳ ಬಗ್ಗೆ ಘೋಷಣೆ ಮಾಡಿ, ಮಾಲೀಕತ್ವದ ಹಕ್ಕಿನ ಪ್ರಮಾಣಪತ್ರ ಪಡೆದು ಇಟ್ಟುಕೊಳ್ಳಲು ಕಾಲಾವಾಕಾಶ ನೀಡಲಾಗಿತ್ತು.
ಆ ರೀತಿ ಪ್ರಮಾಣ ಪತ್ರ ಪಡೆದಿರುವವರಿಗೆ ಈಗಲೂ ಅಂತಹ ವಸ್ತು ಇಟ್ಟುಕೊಳ್ಳಲು ಅವಕಾಶ ಇದೆ. ಆದರೆ ಹಲವು ಜನರಿಗೆ ಈ ಹಿಂದೆ ನೀಡಲಾಗಿದ್ದ ಕಾಲಾವಕಾಶದ ಬಗ್ಗೆ ಸಾರ್ವಜನಿಕ ಮಾಹಿತಿಯ ಕೊರತೆ ಇದ್ದು, ಇದು ಶಿಕ್ಷಾರ್ಹ ಅಪರಾಧ ಎಂಬುದೂ ಬಹುತೇಕರಿಗೆ ತಿಳಿದಿರುವುದಿಲ್ಲ. ಈ ಕಾರಣಕ್ಕೆ ಸರ್ಕಾರ 3 ತಿಂಗಳ ಕಾಲಾವಕಾಶ ನೀಡಲು ಇಂದು ಸಚಿವ ಸಂಪುಟದಲ್ಲಿ ಅಂಗೀಕಾರ ಮಾಡಲಾಗಿದ್ದು, ಸದ್ಯದಲ್ಲೇ ಈ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಲಿದೆ.