ಬೆಂಗಳೂರು: ರಾಜ್ಯದ ರೈತರಿಗೆ ಸಂತಸದ ಸುದ್ದಿಯೊಂದಿದೆ. ಕೃಷಿ ಭಾಗ್ಯ ಯೋಜನೆಯನ್ನು ಮತ್ತೆ ಆರಂಭಿಸಲು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಂಪುಟ ಸಭೆಯ ಬಳಿಕ ಸಚಿವ ಹೆಚ್ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನಡಿ 24 ಜಿಲ್ಲೆಗಳ 106 ತಾಲೂಕಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿಗೆ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದರು.
ಪ್ರಧಾನಮಂತ್ರಿ ಕೃಷಿಸಿಂಚಾಯಿ ಯೋಜನೆ 5 ತಾಲೂಕಿನಲ್ಲಿ ಜಾರಿಗೆ ಒಪ್ಪಿಗೆ ನೀಡಲಾಗಿದೆ. 2025-26ನೇ ಸಾಲಿನ ವರೆಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನಗೊಳ್ಳಲಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಒಟ್ಟು ಮೊತ್ತ 38 ಕೋಟಿ ರೂಪಾಯಿ ಆಗಿದೆ. ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಗೆ ವಿಮಾ ಕಂಪನಿ ನಿಗದಿ ಮಾಡಲಾಗಿದೆ. ಕ್ಲಸ್ಟರ್ವಾರು ವಿಮಾ ಸಂಸ್ಥೆಗಳ ನಿಗದಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.