ಬೆಂಗಳೂರು: ನಟ ಗಣೇಶ್ ಅವರಿಗೆ ಬಂಡೀಪುರ ಅರಣ್ಯದ ಸಮೀಪ ಗುಂಡ್ಲುಪೇಟೆ ತಾಲೂಕಿನ ಜಕ್ಕಳ್ಳಿಯಲ್ಲಿ ತಾತ್ಕಾಲಿಕ ಕಟ್ಟಡ ನಿರ್ಮಿಸಲು ನೀಡಿದ್ದ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಮಂಗಳವಾರ (ಸೆ.5) ತಿಳಿಸಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗಣೇಶ್ ಅವರ ಜಮೀನು ಇದೆ. ಅವರು ಮನೆ ನಿರ್ಮಿಸುತ್ತಿರುವ ವಿಚಾರವಾಗಿ ಆಕ್ಷೇಪ ವ್ಯಕ್ತವಾಗಿದೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಟ ಗಣೇಶ್ ಅವರಿಗೆ ಜಕ್ಕಳ್ಳಿಯ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ತಾತ್ಕಾಲಿಕ ಕಟ್ಟಡ ನಿರ್ಮಿಸಲು ಕ್ರಮಬದ್ಧವಾಗಿ, ನಿಯಮಬದ್ಧವಾಗಿ ಅರಣ್ಯ ಇಲಾಖೆ ಅನುಮತಿ ನೀಡಿತ್ತು. ಆದರೆ, ಅವರು ಶಾಶ್ವತ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಅನುಮತಿ ರದ್ದು ಮಾಡಲಾಗಿದೆ ಎಂದು ಹೇಳಿದರು.