ಬೆಂಗಳೂರು: ಲೋಕಾಯುಕ್ತ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ಹೆಚ್ಚಿನ ತನಿಖೆಗಾಗಿ ಕೆಆರ್ ಪುರಂ ತಹಶೀಲ್ದಾರ್ ಆಗಿದ್ದ ಅಜಿತ್ ರೈ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಲೋಕಾಯುಕ್ತ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಅಜಿತ್ ರೈ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರಂತೆ ಅಜಿತ್ ರೈ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ವಿಶೇಷ ನ್ಯಾಯಾಲಯವು, ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿತು.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತರಿಂದ ಬಂಧಿತರಾಗಿದ್ದಅಜಿತ್ ರೈ ಅವರಿಗೆ ಹಿಂಬಡ್ತಿ ನೀಡಿ ರಾಯಚೂರಿಗೆ ವರ್ಗಾವಣೆಯಾಗಿದೆ. ಸಿರವಾರ ತಾಲೂಕಿಗೆ ತಹಶೀಲ್ದಾರ್ ಗ್ರೇಡ್-1 ನಿಂದ ತಹಶಿಲ್ದಾರ್ ಗ್ರೇಡ್-2 ಹುದ್ದೆಗೆ ಹಿಂಬಡ್ತಿಯಾಗಿ ಅಜಿತ್ ರೈ ವರ್ಗಾವಣೆ ಮಾಡಲಾಗಿತ್ತು. ಇದಕ್ಕೆ ಸಾರ್ವಜನಿಕರು ಸಾಮಾಜಿಕ ಜಾಲತಾಣ ಸೇರಿ ಎಲ್ಲೆಡೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಜಿತ್ ರೈ ಅಮಾನತ್ತಿನಲ್ಲಿದ್ದರೂ ಜೂನ್ 30 ರಂದು ನೇಮಕಾತಿ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸುವಂತೆ ಜನರು ಒತ್ತಾಯಿಸುತ್ತಿದ್ದರು.