ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರೇವಣ್ಣ ಅವರಿಗೆ ಹೈಕೋರ್ಟ್ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಈ ಕುರಿತಂತೆ ಪರಾಜಿತ ಅಭ್ಯರ್ಥಿ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜ್ಯೋತಿ ಮೂಲಿಮನಿ ಅವರ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು, ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಸಮನ್ಸ್ ನೀಡಿದೆ. ಆದರೆ, ಈವರೆಗೂ ಅವರಿಗೆ ಸಮನ್ಸ್ ಜಾರಿಯಾಗಿಲ್ಲ. ಆದ್ದರಿಂದ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿ ಮಾಡಲು ಆದೇಶಿಸಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಎಚ್.ಡಿ. ರೇವಣ್ಣ ಸೇರಿದಂತೆ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಮತ್ತೆ ಸಮನ್ಸ್ ಜಾರಿಗೊಳಿಸಿ ವಿಚಾರಣೆಯನ್ನು ನ.29ಕ್ಕೆ ಮುಂದೂಡಿತು.