ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಡರಾತ್ರಿ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ.
ಅಮಿತ್ ಶಾರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ವಾಸ್ತವ್ಯ ಹೂಡಿರುವ ಅಮಿತ್ ಶಾ ಇಂದು ಚುನಾವಣಾ ಪ್ರಚಾರ ಕಾರ್ಯಗಳ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
ಇಂದು ಸಂಜೆ 5:50ಕ್ಕೆ ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆಲಿಪ್ಯಾಡ್ಗೆ ಬಂದಿಳಿಯಲಿರುವ ಅಮಿತ್ ಶಾ ರಸ್ತೆಯ ಮೂಲಕ ಚಿಕ್ಕಮಳೂರು ಗ್ರಾಮಕ್ಕೆ ಆಗಮಿಸಲಿದ್ದಾರೆ.
ಚಿಕ್ಕಮಗಳೂರು ಗ್ರಾಮದಿಂದ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ಆರಂಭಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಪರ ಸುಮಾರು ಒಂದೂವರೆ ಕಿ.ಮೀ ದೂರ ಮೆರವಣಿಗೆ ನಡೆಸಿ ಮತಯಾಚನೆ ಮಾಡಲಿದ್ದಾರೆ.
ಅಮಿತ್ ಶಾ ಕಾರ್ಯಕ್ರಮದಲ್ಲಿ ವಿಜಯೇಂದ್ರ, ಅಶೋಕ್, ಕುಮಾರಸ್ವಾಮಿ, ನಿಖಿಲ್ ಸೇರಿ ಸ್ಥಳೀಯ ಮುಖಂಡರು ಭಾಗಿಯಾಗಲಿದ್ದು ಸುಮಾರು 25 ಸಾವಿರಕ್ಕೂ ಹೆಚ್ಚು ಜನರನ್ನ ಸೇರಿಸಲು ಬಿಜೆಪಿ ಮುಖಂಡರು ಪ್ಲಾನ್ ಮಾಡಿದ್ದಾರೆ.