ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಆಪಲ್ ಐಫೋನ್ ತಯಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, “ಶೀಘ್ರದಲ್ಲೇ ರಾಜ್ಯದಲ್ಲಿ ಆಪಲ್ ಫೋನ್ ಗಳನ್ನು ತಯಾರಿಸಲಾಗುವುದು. ಇದು ಸುಮಾರು 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದರ ಜೊತೆಗೆ, ಕರ್ನಾಟಕಕ್ಕೆ ಸಾಕಷ್ಟು ಅವಕಾಶಗಳನ್ನು ಸೃಷ್ಟಿಸುತ್ತದೆ.
“ಪ್ರಧಾನಿ ನರೇಂದ್ರ ಮೋದಿ ಜಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, 2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡಲು ನಾವು ನಮ್ಮ ಪಾಲನ್ನು ನೀಡುತ್ತೇವೆ” ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಪೋಸ್ಟ್ ಅನ್ನು ಸಿಎಂ ಬೊಮ್ಮಾಯಿ ಟ್ಯಾಗ್ ಮಾಡಿದ್ದಾರೆ.
ಮಾಧ್ಯಮ ವರದಿಯನ್ನು ಉಲ್ಲೇಖಿಸಿ ರಾಜೀವ್ ಚಂದ್ರಶೇಖರ್, “ಭಾರತದಲ್ಲಿ ಆಪಲ್ ಮೊಬೈಲ್ ತಯಾರಿಗೆ 300 ಎಕರೆ ಜಾಗದಲ್ಲಿ ಕಾರ್ಖಾನೆ ನಿರ್ಮಿಸಲಾಗುವುದು ಎಂದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಡಬಲ್ ಎಂಜಿನ್ ಸರ್ಕಾರವು ಹೂಡಿಕೆ ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಕರ್ನಾಟಕಕ್ಕೆ 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸೃಷ್ಟಿಸಲು ಕೆಲಸ ಮಾಡುತ್ತಿದೆ.
ಆಪಲ್ ಇಂಕ್ ಪಾಲುದಾರ ಫಾಕ್ಸ್ಕಾನ್ ಟೆಕ್ನಾಲಜಿ ಗ್ರೂಪ್ ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ಭಾರತದಲ್ಲಿ ಹೊಸ ಸ್ಥಾವರದಲ್ಲಿ ಸುಮಾರು 700 ಮಿಲಿಯನ್ ಡಾಲರ್ ಹೂಡಿಕೆ ಮಾಡಲು ಯೋಜಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಉತ್ಪಾದನಾ ಘಟಕವನ್ನು ಚೀನಾದಿಂದ ಕರ್ನಾಟಕಕ್ಕೆ ಸ್ಥಳಾಂತರಿಸಲಾಗುವುದು.
ತೈವಾನ್ ಕಂಪನಿಯು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ 300 ಎಕರೆ ಸ್ಥಳದಲ್ಲಿ ಐಫೋನ್ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಯೋಜಿಸಿದೆ. ಹ್ಯಾಂಡ್ ಸೆಟ್ ಗಳ ಜೋಡಣೆ ಘಟಕವನ್ನು ಸ್ಥಾಪಿಸುವ ಚಿಂತನೆಯಿದೆ ಎಂದು ಮೂಲಗಳು ತಿಳಿಸಿವೆ.