ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಕಮಲ ಪಾಳಯದ ಹಲವು ನಾಯಕರು ಅಸಮಾಧಾನಗೊಂಡಿದ್ದರು.
ವಿಪಕ್ಷ ಸ್ಥಾನಕ್ಕಾದರು ಉತ್ತರ ಕರ್ನಾಟಕದ ಹಲವು ನಾಯಕರು ಬೇಡಿಕೆ ಇಟ್ಟಿದ್ದರು. ಆದರೆ ಆರ್ ಅಶೋಕ್ ಅವರಿಗೆ ವಿಪಕ್ಷ ಸ್ಥಾನವನ್ನ ನೀಡಿರುವುದು ರಮೇಶ್ ಜಾರಕಿಹೊಳಿ, ಅರವಿಂದ್ ಬೆಲ್ಲದ್, ಬಸವನಗೌಡ ಪಾಟೀಲ್ ಯತ್ನಾಳ್ ತೀರಾ ಅಸಮಾಧಾನಗೊಂಡಿದ್ದು ಅದನ್ನು ಶಮನಗೊಳಿಸುವ ನಿಟ್ಟಿನಲ್ಲಿ ಬಿ ವೈ ವಿಜಯೇಂದ್ರ ಮುಂದಾಗಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸದಾಶಿವನಗರದ ಅವರ ನಿವಾಸದಲ್ಲಿ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಭೇಟಿಯಾಗಿ ಅಸಮಾಧಾನ ಶಮನಕ್ಕೆ ಮುಂದಾಗಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಆಗುವ ಹೊಡೆತದಿಂದಾಗಿ ವಿಜಯೇಂದ್ರ ಅವರು ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕ ರಮೇಶ್ ಜಾರಕಿಹೊಳಿ ಅವರ ಜೊತೆಗೆ 30 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
ಈ ವೇಳೆ ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರ ಅವರ ಜೊತೆ ಪಕ್ಷದ ಒಳಗೆ ಆಗುತ್ತಿರುವ ಹಲವು ವಿಚಾರಗಳನ್ನ ಚರ್ಚಿಸಿದ್ದು, ಕೆಲ ಪಕ್ಷದ ನಾಯಕರ ನಡೆಯ ಕುರಿತು ಚರ್ಚಿಸಿದ್ದಾರೆ.
ಸಭೆಯ ನಂತರ ಮಾತನಾಡಿದ ವಿಜಯೇಂದ್ರ ರಮೇಶ್ ಜಾರಕಿಹೊಳಿ ಅವರು ಕೆಲವು ನೋವುಗಳನ್ನೂ ತೋಡಿಕೊಂಡಿದ್ದಾರೆ. ರಾಷ್ಟ್ರೀಯ ನಾಯಕರು, ವರಿಷ್ಠರು ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ. ಎಲ್ಲರೂ ಜೊತೆಯಾಗಿ ನರೇಂದ್ರ ಮೋದಿಜೀ ಅವರ ಕೈಯನ್ನು ಬಲಪಡಿಸುತ್ತೇವೆ ಎಂದು ಹೇಳಿದರು.
ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.