ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸೆ.7ರಂದು ಗಣೇಶ ಚತುರ್ಥಿ ಹಬ್ಬದ ದಿನವಾಗಿದ್ದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ, ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಮೀರಿದಲ್ಲಿ ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ.

ನಗರದಾದ್ಯಂತ ಗಣೇಶ ಉತ್ಸವವನ್ನು ಆಯೋಜಿಸುವವರಿಗೆ ಈಗಾಗಲೇ ಬಿಬಿಎಂಪಿ ಕಡ್ಡಾಯವಾಗಿ ಪಾಲಿಸುವಂತೆ ಕೆಲ ನಿಯಮಗಳ ಪಟ್ಟಿ ಪ್ರಕಟಿಸಿತ್ತು. ನಗರದ ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ರಸ್ತೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಅಹಿತಕರ ಘಟನೆ ನಡೆದರೆ ಗಣೇಶ ಉತ್ಸವದ ಆಯೋಜಕರನ್ನೇ ಹೊಣೆ ಮಾಡುವ ಬಗ್ಗೆ ಬಿಬಿಎಂಪಿ ಎಚ್ಚರಿಕೆ ನೀಡಿತ್ತು.