ಬೆಂಗಳೂರು ಗ್ರಾಮಾಂತರ: ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ ಕಾರ್ಯಕ್ರಮವು ಕಂದಾಯ ಇಲಾಖೆಯ ವಿಶಿಷ್ಟವಾದ ಕಾರ್ಯಕ್ರಮವಾಗಿದ್ದು, ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುವುದರಿಂದ, ಕಂದಾಯ ಸೇರಿದಂತೆ ವಿವಿಧ ಇಲಾಖೆಯ ಸೌಲಭ್ಯಗಳನ್ನು ಒಂದೇ ಸೂರಿನಡಿ ಜನರಿಗೆ ಪರಿಣಾಮಕಾರಿಯಾಗಿ ತಲುಪಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿಯ ಹಸಿರುವಳ್ಳಿ ಗ್ರಾಮದಲ್ಲಿಂದು ನಡೆದ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರವು ಎಬಿಎಆರ್ಕೆ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು ಸಾರ್ವಜನಿಕರು ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ಪಡೆಯುವ ಮೂಲಕ ವರ್ಷಕ್ಕೆ ಐದು ಲಕ್ಷದವರೆಗಿನ ಆರೋಗ್ಯ ಸೌಲಭ್ಯವನ್ನು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳ ಮೂಲಕ ಪಡೆಯಬಹುದಾಗಿದೆ ಎಂದು ಹೇಳಿದರು.
ಹಸಿರುವಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ 4780 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುತ್ತಿದೆ ಎಂದರಲ್ಲದೆ, ಸಾರ್ವಜನಿಕರ ಮುಕ್ತವಾಗಿ ಅಹವಾಲುಗಳನ್ನು ಸಲ್ಲಿಸಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.
ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಕೆ.ಶ್ರೀನಿವಾಸಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ ಕಾರ್ಯಕ್ರಮವು ಸರ್ಕಾರದ ಉತ್ತಮ ಕಾರ್ಯಕ್ರಮವಾಗಿದ್ದು, ಜನರಿಗೆ ಉಪಯೋಗವಾಗುತ್ತಿದೆ. ಹಸಿರುವಳ್ಳಿ ಗ್ರಾಮದಲ್ಲಿ ಉದ್ಟಾಟನೆಯಾದ ಡಿಜಿಟಲ್ ಲೈಬ್ರರಿಯಿಂದ ವಿದ್ಯಾರ್ಥಿಗಳಿಗೆ ಅತ್ಯುಪಯುಕ್ತವಾಗಲಿದೆ. ಇದೇ ರೀತಿ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಡಿಜಿಟಲ್ ಗ್ರಂಥಾಲಯ ಸೌಲಭ್ಯ, ಆಟದ ಮೈದಾನ ಸೌಲಭ್ಯ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಹಸಿರುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚನ್ನಕೃಷ್ಣಪ್ಪ, ಉಪಾಧ್ಯಕ್ಷರಾದ ಸಿದ್ಧಮ್ಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣ್ಣಪ್ಪ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ಕುಮಾರ್, ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸುತ್ತಮುತ್ತಲಿನ ಗ್ರಾಮಸ್ಥರು, ಜಿಲ್ಲಾ, ತಾಲ್ಲೂಕು ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.