ಬೆಂಗಳೂರು ಗ್ರಾಮಾಂತರ: ಮುಂದಿನ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು.ಕ್ರೀಡಾಂಗಣಗಳು,ಮೈದಾನಗಳನ್ನು ಸಿದ್ಧಪಡಿಸಿಕೊಂಡು ಅಚ್ಚುಕಟ್ಟಾಗಿ ಪಂದ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.
ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಸಂಜೆ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,2022-23 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಆಯೋಜಿಸಲಾಗುವುದು. ಇದಕ್ಕೂ ಮುನ್ನ ತಾಲೂಕು ಮಟ್ಟದಲ್ಲಿ ತಹಸೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳೀಯ ನೌಕರರ ಸಂಘಗಳ ಸಹಕಾರದೊಂದಿಗೆ ಕ್ರೀಡಾಕೂಟ ಸಂಘಟಿಸಬೇಕು. ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಸೂಕ್ತ ಕ್ರೀಡಾಂಗಣ, ಮೈದಾನ ಹಾಗೂ ಸಭಾಂಗಣಗಳನ್ನು ಗುರುತಿಸಿ, ಸಜ್ಜುಗೊಳಿಸಬೇಕು. ಊಟ, ಉಪಹಾರ, ಕುಡಿಯುವ ನೀರು ಮೊದಲಾದ ಅಗತ್ಯ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಆರ್.ಶಾಲಿನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಹೆಚ್.ಬಾಲಕೃಷ್ಣ, ಪಿ.ಗಂಗಾಧರಪ್ಪ, ಎಂ.ಎಸ್.ರಾಜಶೇಖರ, ಆರ್.ಮುನಿಶಾಮಪ್ಪ, ಎಸ್.ಜಿ.ರಾಜಶೇಖರ, ಚಂದ್ರಶೇಖರ, ಮಹ್ಮದ್, ರಾಜು ಸೇರಿದಂತೆ ತಾಲೂಕು ದೈಹಿಕ ಶಿಕ್ಷಕರ ಸಂಘಗಳ ಅಧ್ಯಕ್ಷರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.