ಬೆಂಗಳೂರು ಗ್ರಾಮಾಂತರ: ಸಂವಿಧಾನ ಶಿಲ್ಪಿ ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ಅವರು ತನ್ನ ಸ್ವಂತಕ್ಕೆ ಏನನ್ನೂ ಬಯಸದೆ, ಸಮಾಜದಲ್ಲಿ ಮೇಲು-ಕೀಳು ಎಂಬ ತಾರತಮ್ಯ ಹೋಗಲಾಡಿಸಲು, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೂ ಸಮಾನ ಮೀಸಲಾತಿ ನೀಡಲು ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ಇಂದು ನಡೆದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ, ಗೌರವ ಸಲ್ಲಿಸಿ ಅವರು ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದರ ಫಲವಾಗಿ ನಾನು ಜಿಲ್ಲಾಧಿಕಾರಿಯಾಗಿರುವೆ ಎಂದು ಹೇಳಿದರಲ್ಲದೆ ಸದ್ಯದಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿಕೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಮಾತನಾಡಿ ಡಾ. ಭೀಮ್ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೆ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರ ಏಳಿಗೆಗಾಗಿ, ಅಸ್ಪ್ರಶ್ಯತೆ, ಅಸಮಾನತೆಯ ವಿರುದ್ದ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ. ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಾಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ ಎಂದು ತಿಳಿಸಿದರಲ್ಲದೆ ಅಂಬೇಡ್ಕರ್ ಅವರ ಸಂವಿಧಾನ ರಚನೆಯ ಫಲವಾಗಿ ನಾನು ಶಾಸಕನಾಗಿರುವೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಸಮಾಜದ ಮುಖಂಡರಾದ ಬುಳ್ಳಳ್ಳಿ ರಾಜಪ್ಪ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು, ಹೋರಾಟಗಾರರು, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.