ಬೆಂಗಳೂರು: ಕೋಮುಸೂಕ್ಷ್ಮ ಶಿವಾಜಿನಗರ ಬಡಾವಣೆಯ ಮಸೀದಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಈ ಘಟನೆಯು ಸ್ಥಳೀಯರು ಮತ್ತು ಪೊಲೀಸರಲ್ಲಿ ಭೀತಿ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸಿತ್ತು.
ಬುಧವಾರ ತಡರಾತ್ರಿ ನಡೆದ ಘಟನೆಯ ನಂತರ, ಶೋಧ ಕಾರ್ಯಾಚರಣೆ ನಡೆಸಲಾಯಿತು. ವಿಶೇಷವೆಂದರೆ, ದುಷ್ಕರ್ಮಿಗಳು ರಾಷ್ಟ್ರೀಯ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿ ಶಿವಾಜಿನಗರದ ಅಜಂ ಮಸೀದಿಯ ಆವರಣದಲ್ಲಿ ಭಯೋತ್ಪಾದಕರು ಬಾಂಬ್ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.
ಕೂಡಲೇ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳು, ಪೊಲೀಸ್ ಇಲಾಖೆ, ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು.
ಭೀತಿ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸಲು ಬೆಂಗಳೂರಿನ ಹೊರಗಿನಿಂದ ಕರೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.