ಬೆಂಗಳೂರು: ಸಿಎಂ ಸ್ಥಾನ ಕೊಟ್ಟರೆ ಮಾತ್ರ ತೆಗೆದುಕೊಳ್ಳುತ್ತೇನೆ, ಸಿಎಂ ಸ್ಥಾನ ಇಲ್ಲದಿದ್ದರೆ ಯಾವುದೇ ಖಾತೆಯೂ ಬೇಡವೂ ಬೇಡ. ಸಂಪುಟದಲ್ಲೂ ಸೇರ್ಪಡೆ ಆಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಯಾವುದೇ ಸಚಿವ ಸ್ಥಾನವೂ ತನಗೆ ಬೇಡವೇ ಬೇಡ. ಸಿಎಂ ಸ್ಥಾನ ಮಾತ್ರ ತನಗೆ ಬೇಕು ಎಂದು ಡಿಕೆ ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದಾರೆ.
ಇಬ್ಬರ ನಡುವೆ ಅಧಿಕಾರ ಹಂಚಿಕೆ ಸೂತ್ರವನ್ನು ಹೈಕಮಾಂಡ್ ಪ್ರಸ್ತಾಪಿಸಿದೆ. ಆದರೆ, ಅಧಿಕಾರ ಹಂಚಿಕೆ ಸೂತ್ರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಪ್ಪುತ್ತಿಲ್ಲ. ಛತ್ತೀಸ್ಗಢ ಹಾಗೂ ರಾಜಸ್ಥಾನದ ಉದಾಹರಣೆಗಳನ್ನು ಡಿಕೆ ಶಿವಕುಮಾರ್ ಹೈಕಮಾಂಡ್ಗೆ ನೀಡುತ್ತಿದ್ದಾರೆ. ಅಲ್ಲಿ ಕೂಡ ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆಯಾಗಿತ್ತು. ಆದರೆ, ಶಾಸಕರ ಬೆಂಬಲ ಇದೆ ಎಂದು ಅಲ್ಲಿನ ಮುಖ್ಯಮಂತ್ರಿಗಳು ಬೇರೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆ ವಾದ ಮಂಡಿಸುತ್ತಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಒಲವಿದೆ. ಆದ್ದರಿಂದ ಶಾಸಕರ ಅಭಿಪ್ರಾಯ, ಸಮುದಾಯದ ಬೆಂಬಲ ಆಧರಿಸಿ ತೀರ್ಮಾನ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಭವಿಷ್ಯದ ದೃಷ್ಟಿಯಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟು ಬೇರೆಯವರನ್ನು ಸಿಎಂ ಸ್ಥಾನ ಮಾಡಬೇಕೆಂಬ ಆಸಕ್ತಿ ಇದೆ ಎಂದು ಮೂಲಗಳು ತಿಳಿಸಿವೆ. ಆದ್ದರಿಂದ ಡಿಕೆ ಶಿವಕುಮಾರ್ ಅವರ ಮೇಲೆ ಖರ್ಗೆ ಒಲವು ಇದೆ ಎಂದು ಹೇಳಲಾಗುತ್ತಿದೆ.