ಬೆಂಗಳೂರು : ಶುಕ್ರವಾರ (ಏ.22) ದಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟಾರೆ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಎಸ್ಎಸ್ಎಲ್’ಸಿ ಪರೀಕ್ಷೆಯಂತೆಯೇ ಪಿಯು ಪರೀಕ್ಷೆಗೂ ಯಾವುದೇ ಧರ್ಮ ಸೂಚಕ ಉಡುಪು ಧರಿಸುವುದನ್ನು ಸರ್ಕಾರ ಈಗಾಗಲೇ ನಿಷೇಧಿಸಿದ್ದು, ಅದರಂತೆ ತಮ್ಮ ಕಾಲೇಜಿನಲ್ಲಿ ನಿಗದಿಪಡಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕಿದೆ. ಸಮವಸ್ತ್ರ ಇಲ್ಲದಿದ್ದಲ್ಲಿ ಯಾವುದೇ ಧರ್ಮ ಸೂಚಕವಲ್ಲದ ಉಡುಪು ಧರಿಸಿ ಹಾಜರಾಗಲು ಸೂಚಿಸಿದೆ.
ಈ ಬಾರಿ ಪರೀಕ್ಷೆಗೆ 5241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿವೆ. ಮುಖ್ಯ ಅಧೀಕ್ಷಕರನ್ನು ಬಿಟ್ಟು ಉಳಿದ ಸಿಬ್ಬಂದಿ-ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧಿಸಲಾಗಿದೆ.
ಪರೀಕ್ಷಾ ಅಕ್ರಮಗಳ ಮೇಲೆ ನಿಗಾವಹಿಸಲು 2900ಕ್ಕೂ ಹೆಚ್ಚು ಜಿಲ್ಲಾ, ತಾಲ್ಲೂಕು ಮತ್ತು ವಿಶೇಷ ಜಾಗೃತ ದಳ ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಕೋವಿಡ್ ತೀವ್ರತೆಯಿಂದಾಗಿ ಪರೀಕ್ಷೆ ನಡೆಸದೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಎರಡೂ ತರಗತಿ ಮಕ್ಕಳನ್ನು ಸಾಮೂಹಿಕವಾಗಿ ಪಾಸ್ ಮಾಡಲಾಗಿತ್ತು. ಈ ಸಾಲಿನಲ್ಲೂ ಆರಂಭದ ಕೆಲ ತಿಂಗಳು ಕೋವಿಡ್ ಬಾದಿಸಿದ್ದರಿಂದ ಸಮಯಕ್ಕೆ ಸರಿಯಾಗಿ ಕಾಲೇಜುಗಳು, ಭೌತಿಕ ತರಗತಿಗಳು ಆರಂಭವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರಶ್ನೆ ಪತ್ರಿಗೆ ಸರಳವಾಗಿರುತ್ತದೆ. ವಿದ್ಯಾರ್ಥಿಗಳು ಭಯ, ಆತಂಕವಿಲ್ಲದೆ ನಿರಾತಂಕವಾಗಿ ಪರೀಕ್ಷೆ ಬರೆಯಬಹುದು ಎಂದು ಹೇಳಿದ್ದಾರೆ.