ಬೆಂಗಳೂರು (ಜ. 14) : ಇನ್ಫೋಸಿಸ್ ಕಂಪನಿ ಹೆಸರಿನಲ್ಲಿ ಕರೆ ಮಾಡಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯಯೊಬ್ಬರನ್ನು ನಂಬಿಸಿ ₹4.32 ಲಕ್ಷ ಪಡೆದು ವಂಚಿಸಲಾಗಿದೆ. ಗೊರಗುಂಟೆ ಪಾಳ್ಯದ ಎಂ.ವಿನಿತ್(24) ಎಂಬುವವರು ಸೈಬರ್ ಚೋರರಿಂದ ವಂಚನೆಗೆ ಒಳಗಾಗಿದ್ದಾರೆ. ಇವರು ನೀಡಿದ ದೂರಿನ ಮೇರೆಗೆ ಉತ್ತರ ಸಿಇಎನ್ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಸೈಬರ್ ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.
ಇತ್ತೀಚೆಗೆ ವಿನೀತ್ ಅವರ ಮೊಬೈಲ್ಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ತಾನು ಇಸ್ಫೋಸಿಸ್ ಕಂಪನಿಯಿಂದ ಮಾತನಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾನೆ. ಕಂಪನಿಯಲ್ಲಿ ಕೆಲಸ ಖಾಲಿ ಇದ್ದು, ನಿಮಗೆ ಕೆಲಸ ನೀಡುವುದಾಗಿ ಹೇಳಿ ನಂಬಿಸಿದ್ದಾನೆ. ಈತನ ಮಾತು ನಂಬಿದ ವಿನೀತ್ ಕೆಲಸ ಮಾಡಲು ತಾವು ಸಿದ್ಧರಿರುವುದಾಗಿ ಹೇಳಿದ್ದಾರೆ. ಈ ವೇಳೆ ಅಪರಿಚಿತ ವ್ಯಕ್ತಿಯು ಕೆಲಸ ಸೇರಲು ಕೆಲ ಶುಲ್ಕಗಳನ್ನು ಪಾವತಿಸಬೇಕು ಎಂದು ವಿವಿಧ ಹಂತಗಳಲ್ಲಿ ವಿನೀತ್ ಅವರಿಂದ ಬರೋಬ್ಬರಿ .4.30 ಲಕ್ಷ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.
ಬಳಿಕ ವಿನೀತ್ ಕರೆ ಮಾಡಿದಾಗ ಅಪರಿಚಿತ ತನ್ನ ಮೊಬೈಲ್ ಸ್ವಿಚ್ಆಫ್ ಮಾಡಿದ್ದಾನೆ. ಹಲವು ಬಾರಿ ಪ್ರಯತ್ನಿಸಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ. ಬಳಿಕ ವಿನೀತ್ಗೆ ತಾನು ಸೈಬರ್ ಖದೀಮರ ಬಲೆಗೆ ಬಿದ್ದಿರುವುದು ಅರಿವಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವಂಚಕನ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.