ಬೆಂಗಳೂರು: ಉಕ್ರೇನ್ ನ ಖಾರ್ಕಿವ್ ಸಿಟಿಯ ಮೇಲೆ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಗಾಯಗೊಂಡಿರುವ ಹಾವೇರಿ ಮೂಲದ ವಿದ್ಯಾರ್ಥಿ ಬಗ್ಗೆ ವಿವರ ಸಂಗ್ರಹಿಸಲು ಸರ್ಕಾರ ಪ್ರಯತ್ನ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗಾಯಗೊಂಡಿರುವ ವಿದ್ಯಾರ್ಥಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಒಂದು ವರದಿ ಪ್ರಕಾರ ವಿದ್ಯಾರ್ಥಿ ಸುರಕ್ಷಿತವಾಗಿದ್ದಾನೆ ಎಂದು ಹೇಳಲಾಗುತ್ತಿದ್ದರೆ, ಮತ್ತೊಂದು ವರದಿ ಆತ ಗಾಯಗೊಂಡಿದ್ದಾನೆ ಎಂದು ಹೇಳುತ್ತದೆ. ಈ ಬಗ್ಗೆ ದೃಢ ಸುದ್ದಿಯನ್ನು ಖಚಿತಪಡಿಸಿಕೊಳ್ಳಬೇಕಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ನಿನ್ನೆ ಮಾತನಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ರಾಣಿಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ರಷ್ಯಾದ ಶೆಲ್ ದಾಳಿಗೆ ಸಿಲುಕಿದ್ದರು ಎಂದು ಹೇಳಿದ್ದರು.ಒಬ್ಬರು ಗಾಯಗೊಂಡು ಮತ್ತೊಬ್ಬರು ಸುರಕ್ಷಿತವಾಗಿದ್ದಾರೆ ಎಂದಿದ್ದರು.
ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ರಾಜ್ಯ ಸರ್ಕಾರ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿರುವುದಾಗಿ ಕೂಡ ಮುಖ್ಯಮಂತ್ರಿ ತಿಳಿಸಿದ್ದಾರೆ.