ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಮೆಟ್ರಿಕ್ ನಂತರ ಪ್ರವೇಶಾತಿ ಪಡೆದು ವಿದ್ಯಾರ್ಥಿ ವೇತನ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದರೆ ಅಂತಹ ವಿದ್ಯಾರ್ಥಿಗಳ ಖಾತೆ ನೇರವಾಗಿ ವಿದ್ಯಾರ್ಥಿ ವೇತನವನ್ನು ಜಮೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎಂ. ನಾರಾಯಣ ಸ್ವಾಮಿ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದಿಂದ ಶೇ.60ರಷ್ಟು ಹಾಗೂ ರಾಜ್ಯ ಸರ್ಕಾರದಿಂದ ಶೇ. 40 ರಷ್ಟು ವಿದ್ಯಾರ್ಥಿ ವೇತನವನ್ನು ಡಿ.ಬಿ.ಟಿ. ಮೂಲಕ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮೆಯಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಗೆ ಕೇಂದ್ರ ಸರ್ಕಾರದಿಂದ 16 ಇಲಾಖೆಗಳಿಗೆ ರೂ. 6,392 ಕೋಟಿ ಹಣ ಬಿಡುಗಡೆ ಆಗಿದೆ. ರೂ. 4,519 ಕೋಟಿ ರಿಲೀಸ್ ಅಗಿದೆ. ರೂ. 3,984 ಕೋಟಿ ವೆಚ್ಚ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಗಂಗಾ ಕಲ್ಯಾಣದ ಯೋಜನೆಗೆ ಪ್ರಾಮುಖ್ಯತೆ ನೀಡುವಂತೆ ಈಗಾಗಲೇ ತಿಳಿಸಲಾಗಿದೆ, ಈ ಯೋಜನೆ ಅಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 53 ಸಾವಿರ ಜನರಿಗೆ ಕೊಳವೆ ಬಾವಿ ಮುಖಾಂತರ ನೀರಿನ ಸೌಲಭ್ಯವನ್ನು ನೀಡಲಾಗಿದೆ. ನರೇಗಾ ಯೋಜನೆಯಡಿ, ತೋಟಗಾರಿಕೆ, ರೇಷ್ಮೆ ಇಲಾಖೆ, ಅರಣ್ಯ ಮತ್ತು ಕೃಷಿ ಇಲಾಖೆ, ಇಲಾಖೆಗಳಿಂದ ಮಾಸ್ಟರ್ ಪ್ಲಾನ್ ರಚನೆ ಮಾಡಲು ಸೂಚಿಸಲಾಗಿದೆ. ದಲಿತರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ವಿಶೇಷವಾದ ಯೋಜನೆಯನ್ನು ರೂಪಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಪ್ಟ ವರ್ಗಗಳ ಜನರ ಆರ್ಥಿಕ ಪ್ರಗತಿ ಸಾಧಿಸಲು 5 ಇಲಾಖೆಗಳು ಒಳಗೊಂಡಂತೆ ಹೆಚ್ಚು ಪ್ರಾಮುಖ್ಯತೆ ನೀಡಲು ನಿರ್ದೇಶನ ಮಾಡಲಾಗಿದೆ ಎಂದು ತಿಳಿಸಿದರು.