ಬೆಂಗಳೂರು: ‘ಎಸ್ಸಿ/ಎಸ್ಟಿಗಳಿಗೆ ಮಾತ್ರ ಮೀಸಲಾತಿಯನ್ನು ಒದಗಿಸುವ ಕುರಿತು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಒಬಿಸಿ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತು ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.
ಆದೇಶದಿಂದ ರಾಜ್ಯದ ಮೇಲಾಗುವ ಪರಿಣಾಮ ಕುರಿತು ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಗೆ ಸಮಸ್ಯೆಗಳಾಗದಂತೆ ಚುನಾವಣೆ ನಡೆಸುವುದು ಹೇಗೆ ಎಂಬ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಸಚಿವರು, ಇಲಾಖೆ ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೊಮ್ಮಾಯಿ ಅವರ ಈ ಭರವಸೆಯು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯ ಆಕಾಂಕ್ಷಿಗಳಿಗೆ, ವಿಶೇಷವಾಗಿ ಒಬಿಸಿಗಳಿಗೆ ಭರವಸೆ ಮೂಡಿಸಿದೆ.