ಬೆಂಗಳೂರು, ಡಿ.1 :ಇದೇ ತಿಂಗಳ 6ರಂದು ಬೆಂಗಳೂರಿಗೆ ಆ ಗಮಿಸಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.
ಬೆಂಗಳೂರು ವಿಶ್ವವಿದ್ಯಾನಿಲಯ ದಲ್ಲಿ ನೂತನವಾಗಿ ಆರಂಭವಾಗಿರುವ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾನಿಲಯ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಬೆಂಗಳೂರಿಗೆ ಆಗಮಿಸಬೇಕಾಗಿತ್ತು.
ಜತೆಗೆ ವಿವಿಧ ವಸತಿ ಯೋಜನೆಗಳಿಗೂ ಸಹ ಪ್ರಧಾನಿಯವರು ಚಾಲನೆ ನೀಡಬೇಕಿತ್ತು. ಆದರೆ, ದೇಶದಲ್ಲಿ ಹೊಸದಾಗಿ
ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವುದರಿಂದ ಈ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಈ ತಿಂಗಳ ಅಂತ್ಯಕ್ಕೆ ಪರಿಸ್ಥಿತಿ ನೋಡಿಕೊಂಡು ಪ್ರಧಾನಿಯವರು ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಭೆ ನಡೆಸಿದ್ದರು.
ಅದರಲ್ಲೂ ವಸತಿ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರುಗಳು ಈಗಾಗಲೇ ಕಾರ್ಯಕ್ರಮದ ಪೂರ್ವಸಿದ್ಧತೆ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವಿವಿ ಸುತ್ತಮುತ್ತ ರಸ್ತೆಗಳಿಗೆ ಡಾಂಬರು, ಸುಣ್ಣ-ಬಣ್ಣವನ್ನು ಸಹ ಮಾಡಲಾಗಿತ್ತು. ಈಗ ಕಾರ್ಯಕ್ರಮ ಮುಂದೂಡಿಕೆಯಾಗಿರುವು ದರಿಂದ ಹಲವರಿಗೆ ನಿರಾಸೆಯಾಗಿದೆ.