ಬೆಂಗಳೂರು: ಕರ್ನಾಟಕ ಗಡಿ ಭಾಗದಲ್ಲಿ ಭಾಷಾ ಸಾಮರಸ್ಯದೊಂದಿಗೆ ಗಡಿ ಭಾಗದಲ್ಲಿ ಕನ್ನಡಿಗರ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಕರೆ ನೀಡಿದರು.
ಗಡಿ ಭಾಗದ ಸಮಸ್ಯೆಗಳ ಬಗ್ಗೆ ಪ್ರತೀ 3 ತಿಂಗಳಿಗೊಮ್ಮೆ ಗಡಿ ಚಿಂತಕರ ಸಭೆ ಮಾಡಿ ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕು, ಗಡಿಭಾಗದಲ್ಲಿ ಕನ್ನಡ ಕಟ್ಟಿ ಬೆಳೆಸುವ ಕಾರ್ಯದಲ್ಲಿ ಅನೇಕ ಮಠಗಳು ಕಾರ್ಯನಿರ್ವಹಿಸುತ್ತಿವೆ ಎಂದು ಶ್ಲಾಘಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು, ಶ್ರೀ ಗುರು ಶಾಂತೇಶ್ವರ ಜನಕಲ್ಯಾಣ ಟ್ರಸ್ಟ್(ರಿ) ಹಿರೇಮಠ, ಬೆಳಗಾವಿ ಇವರ ಸಹಯೋಗದಲ್ಲಿ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಳಗಾವಿ ಹುಕ್ಕೇರಿ ಹಿರೇಮಠದಲ್ಲಿ ನಡೆದ ಗಡಿ ಕನ್ನಡ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಗಡಿ ಭಾಗದ ಸಮಸ್ಯೆಗಳಿಗೆ ಕನಿಷ್ಠ 100 ಕೋಟಿ ಅನುದಾನದ ಅವಶ್ಯಕತೆಯಿದೆ ಎಂದು ಹೇಳಿದರು.
ಇದೇ ವೇಳೆ ಗಡಿ ಭಾಗದ ತಲ್ಲಣಗಳ ಬಗ್ಗೆ ಅಶೋಕ ಚಂದರಗಿ ನೇತೃತ್ವದಲ್ಲಿ ವಿಚಾರಗೋಷ್ಠಿ, ಗುರುದೇವಿ ಹುಲೆಪ್ಪನವರಮಠ ನೇತೃತ್ವದಲ್ಲಿ ಕವಿಗೋಷ್ಠಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಶ್ರೀ ಷ.ಬ್ರ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಮೊದಲಾದವರು ಭಾಗವಹಿಸಿದ್ದರು.