News Karnataka Kannada
Thursday, May 02 2024
ಬೆಂಗಳೂರು ನಗರ

ಕರ್ನಾಟಕದಿಂದ ಒಮಿಕ್ರಾನ್ ವರದಿಯಾದ ಮೇಲೆ ತಜ್ಞರ ಜತೆ ಸಿಎಂ ಸಭೆ: 20 ಅಂಶಗಳು

Basavaraj Bommai
Photo Credit :

ಬೆಂಗಳೂರು : ಕೋವಿಡ್-19 ಹೊಸ ರೂಪಾಂತರ ತಳಿ ಒಮಿಕ್ರಾನ್ ಸೋಂಕಿತರಲ್ಲಿ ಸೌಮ್ಯ ಲಕ್ಷಣಗಳು ಮಾತ್ರ ಕಂಡುಬಂದಿವೆ. ಯಾವುದೇ ಸಾವಿನ ಪ್ರಕರಣಗಳು ವರದಿಯಾಗದೇ ಇರುವುದರಿಂದ ಸೋಂಕು ಹೆಚ್ಚು ತೀವ್ರವಾಗಿಲ್ಲ ಎಂದು ತಜ್ಞ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಓಮಿಕ್ರಾನ್ ರೂಪಾಂತರ ತಳಿ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಜ್ಞರೊಂದಿಗೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ತಜ್ಞರ ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು

1. ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ.

2. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ ಸೌಮ್ಯ ಲಕ್ಷಣಗಳು ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ.

3. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ತಿಳಿಸಿದರು.

4. ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್ ಸಿ ಬಿ ಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು.

5. ಅದಾಗ್ಯೂ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

6. ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೇಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್ ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.

7. ಒಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

8. ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗುವುದು.

9. ಸರಕಾರಿ ನೌಕರರಿಗೆ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಲಾಗುವುದು.

10. ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ. 100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು.

11. ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ.

12. ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗುವುದು.

13. ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.

14. ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಪ್ರತಿದಿನ 1ಲಕ್ಷಕ್ಕೆ ಹೆಚ್ಚಿಸಲಾಗುವುದು. ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು.

15. ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು; ಆಕ್ಸಿಜನ್ ಘಟಕಗಳನ್ನು ಸಜ್ಜುಗೊಳಿಸಲು ಸೂಚಿಸಲಾಗಿದೆ.

16. ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು.

17. ಔಷಧಗಳ ಲಭ್ಯತೆ ಖಾತರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

18. ಸಂಪರ್ಕಿತರ ಪತ್ತೆಯ ಪ್ರಮಾಣ ಹೆಚ್ಚಿಸಲು ಸೂಚಿಸಲಾಗಿದೆ.

19. ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಪ್ರಾರಂಭಿಸಲು ನಿರ್ಧರಿಸಲಾಯಿತು.

20. ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ಒಮಿಕ್ರಾನ್ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿಗಳಲ್ಲಿ ವೈರುಧ್ಯ ಕಂಡು ಬಂದಿರುವ ಕುರಿತು ಕೂಲಂಕಷ ತನಿಖೆ ನಡೆಸುವಂತೆ ಹೈ ಗ್ರೌಂಡ್ ಪೊಲೀಸರಿಗೆ ಸೂಚಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು