ಬೆಂಗಳೂರು, ಮಾ.10 : ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಜಯಗಳಿಸಿದ್ದು, ನರೇಂದ್ರ ಮೋದಿ ನಾಯಕತ್ವಕ್ಕೆ ಸಿಕ್ಕ ಜಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಣದಲ್ಲಿಯೂ ಅಭಿನಂದನಾ ಪೋಸ್ಟ್ಗಳನ್ನು ಹಾಕಿದ್ದಾರೆ.
‘ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಬಿಜೆಪಿಯ ಅಭಿವೃದ್ಧಿ ರಾಜಕಾರಣ ಪರವಾದ ಸುಸ್ಪಷ್ಟ ಜನಾದೇಶವಾಗಿದೆ’ ಎಂದು ಹೇಳಿದ್ದಾರೆ.
ಬಿಜೆಪಿ ಆಡಳಿತವಿದ್ದ ನಾಲ್ಕು ರಾಜ್ಯಗಳಲ್ಲಿ ಮತ್ತೊಮ್ಮೆ ಪಕ್ಷಕ್ಕೆ ಜನತೆ ಆಶೀರ್ವಾದ ಮಾಡಿದ್ದಾರೆ. ವಿರೋಧ ಪಕ್ಷಗಳ ಅಪಪ್ರಚಾರವನ್ನೂ ಮೀರಿ, ಸುಶಾಸನ ಮತ್ತು ಅಭಿವೃದ್ಧಿಗೆ ದೊರೆತ ಮನ್ನಣೆಯಾಗಿದೆ’ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂಬುದುರಲ್ಲಿ ಯಾವುದೆ ಹುರುಳಿಲ್ಲ. ಬಸವರಾಜ ಬೊಮ್ಮಾಯಿ ಅವರೇ ಈ ಸರ್ಕಾರದ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.