ಬೆಂಗಳೂರು, ಮೇ.9: ಶಬ್ದಮಾಲಿನ್ಯ ಉಂಟು ಮಾಡುವ ಯಾವುದೇ ರೀತಿಯ ಚಟುವಟಿಕೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಎಲ್ಲರೂ ಗೌರವಿಸಬೇಕು. ನ್ಯಾಯಾಲಯದ ಆದೇಶದಂತೆ ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಆಜಾನ್ ಮತ್ತು ಸುಪ್ರಭಾತ ಸಂಘರ್ಷ ಹಿನ್ನೆಲೆಯಲ್ಲಿ ಮೇಲಿನಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಯೊಬ್ಬರೂ ಶಬ್ದಮಾಲಿನ್ಯ ತಡೆಗೆ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಹೇಳಿದ್ದಾರೆ.
ಅಜಾನ್ ಕೂಗುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಧ್ವನಿವರ್ಧಕಗಳನ್ನು ತೆರವುಗೊಳಿಸದಿದ್ದರೆ ಹನುಮಾನ್ ಚಾಲೀಸ್ ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಹೇಳಿದ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಸೂಚನೆ ನೀಡಿದ್ದಾರೆ.