ಬೆಂಗಳೂರು: ಗಡಿಯಲ್ಲಿ ಹೋರಾಡುವ ಸೈನಿಕನ ಸೇವೆಯಷ್ಟೇ ಆರೋಗ್ಯ ಕಾರ್ಯಕರ್ತರ ಸೇವೆ ಮಹತ್ವದ್ದಾಗಿದೆ ಕೋವಿಡ್ ಸಮಯದಲ್ಲಿ ಕರ್ನಾಟಕದ ಆರೋಗ್ಯ ಕಾರ್ಯಕರ್ತರು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಸಿಎಸ್ಆರ್ ಕಾರ್ಯಕ್ರಮದಡಿ ನೀಡಿರುವ 1 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಖಾಸಗಿ ಕಂಪನಿಗಳು ಸಾಮಾಜಿಕ ಸೇವೆ ಮಾಡುತ್ತಿರುವುದು ಪ್ರಶಂಸನೀಯ. ಆರೋಗ್ಯ, ಶಿಕ್ಷಣ, ನೀರಾವರಿ ಕ್ಷೇತ್ರಗಳಲ್ಲಿ ಖಾಸಗಿ ಕಂಪನಿಗಳು ಭಾಗಿಯಾಗಿ ಒಳ್ಳೆಯ ಕೆಲಸ ಮಾಡುತ್ತಿವೆ.
ಅವರ ಪ್ರಾಣವನ್ನು ಕೂಡ ಒತ್ತೆ ಇಟ್ಟು ಕೆಲಸ ಮಾಡಿದ್ದಾರೆ. ಆರೋಗ್ಯ ಕಾರ್ಯಕರ್ತರ ಸೇವೆ ದೇಶ ಕಾಯುವ ಸೈನಿಕನ ಸೇವೆಯಷ್ಟೇ ಮಹತ್ವದ್ದಾಗಿದೆ. ಕರ್ನಾಟಕದಲ್ಲಿ ಲಸಿಕೆ ಕಾರ್ಯ ಕೂಡ ಸಾಕಷ್ಟು ವೇಗವಾಗಿ ನಡೆದಿದೆ. 18ಕ್ಕಿಂತ ಮೇಲ್ಪಟ್ಟ ವಯಸ್ಸಿನವರ ವಿಭಾಗದಲ್ಲಿ 100% ರಷ್ಟು ಮೊದಲ ಡೋಸ್ ಹಾಗೂ 90-91% ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗವನ್ನು ಮೆಟ್ಟಿ ನಿಂತಿದ್ದೇವೆ ಎಂದು ಹೇಳಿದರು.