ಬೆಂಗಳೂರು, ಜ. 17 : ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನಲೆಯಲ್ಲಿ ಸೋಮವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಕಂದಾಯ ಸಚಿವ ಆರ್. ಅಶೋಕ ಮತ್ತು ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕೊರೊನಾ ನಿರ್ಬಂಧಗಳನ್ನು ಜನವರಿ 31ರ ತನಕ ವಿಸ್ತರಣೆ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿಲ್ಲ. ಈ ಹಿನ್ನಲೆಯಲ್ಲಿ ಮತ್ತಷ್ಟು ನಿರ್ಬಂಧಗಳು ಜಾರಿಗೆ ಬರುವ ಸಾಧ್ಯತೆ ಇದೆ.
ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಅಧಿಕಾರಿಗಳು ಮತ್ತು ಸಚಿವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದ್ದಾರೆ. ಎಲ್ಲಾ ಜಿಲ್ಲೆಯ ಕೊರೊನಾ ಸ್ಥಿತಿ ಬಗ್ಗೆ ಸಿಎಂ ವರದಿ ಪಡೆಯಲಿದ್ದಾರೆ. ರಾತ್ರಿ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಶಾಲೆಗಳು ಬಂದ್ ಬೆಂಗಳೂರು ನಗರದಲ್ಲಿ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ. ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಠಿಣ ನಿಯಮಗಳನ್ನು ಮುಂದುವರಿಸುವ ಮತ್ತು ಫೆಬ್ರವರಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ, ಸಿನಿಮಾ ಮಂದಿರ, ರೆಸ್ಟೋರೆಂಟ್ ಸೇರಿ ಎಲ್ಲಾ ಕಡೆ ಶೇ. 50ರ ನಿಯಮ ಜಾರಿ, ಮದುವೆ ಸಮಾರಂಭಗಳಿಗೆ ಜನರ ಮಿತಿ ಹೇರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರು ವಾರಾಂತ್ಯದ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕೋವಿಡ್ ಮೂರನೇ ಅಲೆ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿರುವ ಹಿನ್ನಲೆ ಆನ್ಲೈನ್ ಮೂಲಕ ತರಗತಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ ಶಾಲೆಗಳನ್ನು ಬಂದ್ ಮಾಡುವ ಜವಾಬ್ದಾರಿಯನ್ನು ಸರ್ಕಾರ ಜಿಲ್ಲಾಧಿಕಾರಿಗಳಿಗೆ ನೀಡಿದೆ.
ಹಲವಾರು ನಿರ್ಬಂಧಗಳು ಜಾರಿಯಲ್ಲಿದ್ದರೂ ಕರ್ನಾಟಕದಲ್ಲಿ ಭಾನುವಾರ 34047 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 21071 ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 1,97,982ಕ್ಕೆ ಏರಿಕೆಯಾಗಿದೆ.
ಈ ಹಿನ್ನಲೆಯಲ್ಲಿ ಇನ್ನು ಕಠಿಣ ನಿಯಮ ಜಾರಿ ಕುರಿತು ಚರ್ಚೆ ನಡೆಯಲಿದೆ. ತಮಿಳುನಾಡು ಸರ್ಕಾರ ಈಗಾಗಲೇ ವಾರಾಂತ್ಯದ ಲಾಕ್ಡೌನ್ ಘೋಷಣೆ ಮಾಡಿದೆ. ನಮ್ಮ ರಾಜ್ಯದಲ್ಲಿಯೂ ಇದೇ ಮಾದರಿ ಕ್ರಮ ಕೈಗೊಳ್ಳಲಾಗುತ್ತದೆಯೇ? ಕಾದು ನೋಡಬೇಕಿದೆ.
ಬೆಂಗಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಆದ್ದರಿಂದ ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚಿನ ಕಠಿಣ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ.
ಲಾಕ್ಡೌನ್ ಮಾಡುವುದು ಬೇಡ ಎನ್ನುವುದು ಬಹುತೇಕರ ನಿಲುವಾಗಿದ್ದು, ಅದನ್ನು ಹೊರತುಪಡಿಸಿ ಏನೆಲ್ಲ ಕ್ರಮ ಕೈಗೊಳ್ಳಬಹುದು? ಎನ್ನುವ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.
ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಕೋವಿಡ್ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ. ಮೋದಿ ನೀಡಿದ ಸಲಹೆಗಳನ್ನು ಜಾರಿಗೆ ತರುವ ಕುರಿತು ಚರ್ಚೆ ನಡೆಯಲಿದೆ.
ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಮಾರ್ಗಸೂಚಿ ಜಾರಿಗೊಳಿಸುವ ಸಾಧ್ಯತೆ ಇದೆ.