ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟ ‘ಕಲಾ ತಪಸ್ವಿ’ ರಾಜೇಶ್ ಅವರು ಶನಿವಾರ (ಫೆ.19) ಮುಂಜಾನೆ ನಿಧನರಾಗಿದ್ದು, ಕನ್ನಡ ಚಿತ್ರರಂಗ ಮತ್ತೊಬ್ಬ ಕಲಾವಿದನನ್ನು ಕಳೆದುಕೊಂಡಂತಾಗಿದೆ.ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದ ರಾಜೇಶ್ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರನ್ನು ಬದುಕಿಸಿಕೊಳ್ಳಲಾಗಲಿಲ್ಲ ಎಂಬುದು ನೋವಿನ ಸಂಗತಿ.
ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿ ಆಗದೇ ರಾಜೇಶ್ ಮೃತರಾಗಿದ್ದು, ರಾಜೇಶ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ರಾಜೇಶ್ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ಅಭಿಮಾನಿಗಳು ಮತ್ತು ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ. ರಾಜೇಶ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಶನಿವಾರ ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.