ಬೆಂಗಳೂರು: ನೈಸ್ ರಸ್ತೆಯ ಚನ್ನಸಂದ್ರ ಸೇತುವೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ವ್ಯಕ್ತಿಯೊಬ್ಬರು ಸಜೀವ ದಹನವಾಗಿದ್ದಾರೆ.
‘ಮೃತ ವ್ಯಕ್ತಿಯನ್ನು ಉತ್ತರಹಳ್ಳಿಯ ದರ್ಶನ್ (40) ಎಂದು ಗುರುತಿಸಲಾಗಿದೆ. ಇವರು ಬಿಪಿಒ ಕಂಪನಿಯೊಂದರ ಉದ್ಯೋಗಿಯಾಗಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ತುಮಕೂರು ರಸ್ತೆಯಲ್ಲಿರುವ ಸಂಬಂಧಿಕರ ಮನೆಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ದರ್ಶನ್, ಶನಿವಾರ ರಾತ್ರಿ 10.30ರ ಸುಮಾರಿಗೆ ಸ್ಯಾಂಟ್ರೊ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು.
ನೈಸ್ ರಸ್ತೆಯ ಚನ್ನಸಂದ್ರ ಸೇತುವೆ ಬಳಿ ಬಂದಾಗ ಕಾರಿನಲ್ಲಿ ಬೆಂಕಿ ಕಾಣಿಸಿದೆ. ಬಳಿಕ ಕಾರು ಹೊತ್ತಿ ಉರಿದಿದೆ. ಆ ಮಾರ್ಗದಲ್ಲಿ ಹೋಗುತ್ತಿದ್ದವರು ಇದನ್ನು ಗಮನಿಸಿ ನೈಸ್ ಸಂಸ್ಥೆಯ ತುರ್ತು ನೆರವು ತಂಡಕ್ಕೆ ಮಾಹಿತಿ ನೀಡಿದ್ದರು. ಅವರು ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯೂ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟರಲ್ಲಾಗಲೇ ಕಾರು ಸುಟ್ಟು ಕರಕಲಾಗಿತ್ತು’ ಎಂದು ವಿವರಿಸಿದ್ದಾರೆ.
‘ಬೆಂಕಿ ಅವಘಡಕ್ಕೆ ನಿಖರ ಕಾರಣ ಗೊತ್ತಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಅಧಿಕಾರಿಗಳೂ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.