News Karnataka Kannada
Friday, May 10 2024
ಬೆಂಗಳೂರು ನಗರ

ಜನವರಿ 8 ಮತ್ತು 9ರಂದು ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ

Amith Shah 29082021
Photo Credit :

ಬೆಂಗಳೂರು, ಡಿ. 27; ಕೇಂದ್ರ ಗೃಹ ಸಚಿವ, ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 8 ಮತ್ತು 9ರಂದು ಎರಡು ದಿನಗಳ ಕಾಲ ಅವರು ರಾಜ್ಯದಲ್ಲಿ ವಿವಿಧ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಿದೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮಾತ್ರ ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಜನವರಿ 8ರಂದು ಬೆಂಗಳೂರಿಗೆ ಆಗಮಿಸುವ ಅವರು ವಿವಿಧ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಅಮಿತ್ ಶಾ ರಾಜ್ಯ ಪ್ರವಾಸದ ವೇಳೆಯಲ್ಲಿ ಪಕ್ಷದ ಪದಾಧಿಕಾರಿಗಳು, ಶಾಸಕರು, ಸಚಿವರು ಬೆಂಗಳೂರಿನಲ್ಲಿಯೇ ಇರಬೇಕು ಎಂದು ಪಕ್ಷ ಸೂಚನೆ ನೀಡುವ ಸಾಧ್ಯತೆ ಇದೆ. ಮುಂದಿನ ಚುನಾವಣೆ ಸಿದ್ಧತೆಗಳ ಕುರಿತು ಅಮಿತ್ ಶಾ ಹಲವು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.

ಮೊದಲ ಭೇಟಿ: ಜುಲೈ 26ರಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಜುಲೈ 28ರಂದು ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಬಳಿಕ ಹೊಸ ಸಚಿವ ಸಂಪುಟ ರಚನೆಯಾಗಿತ್ತು.

ಆಗ ಅಮಿತ್ ಶಾ ದಾವಣಗೆರೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಪಕ್ಷದ ಸಭೆಗಾಗಿಯೇ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅದರಲ್ಲೂ 2023ರ ಚುನಾವಣೆ ಸಿದ್ಧತೆಗಳ ಕುರಿತು ಚರ್ಚೆ ನಡೆಸಲು ಅಮಿತ್ ಶಾ ಮೊದಲ ಬಾರಿಗೆ ರಾಜ್ಯ ಪ್ರವಾಸಸ ಮಾಡುತ್ತಿದ್ದಾರೆ.

ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂಬ ಸುದ್ದಿಗಳು ಹಬ್ಬಿವೆ. ಹಿರಿಯ ನಾಯಕರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿಯೇ ಅಮಿತ್‌ ಶಾ ರಾಜ್ಯ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

2023ರ ವಿಧಾನಸಭೆ ಚುನಾವಣೆ ಸಿದ್ದತೆಯ ಕುರಿತು ಸಮಾಲೋಚನಾ ಸಭೆ ನಡೆಯಲಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಅಮಿತ್ ಶಾ ಈ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಹ ಜನವರಿ 9ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಣಿ ಡಿಸೆಂಬರ್ 28 ಮತ್ತು 29ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ, ಮುಂದೆ ಬರಲಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಗ್ಗೆಯೂ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

ಹಲವು ಪದಾಧಿಕಾರಿಗಳ ನೇಮಕ ಕರ್ನಾಟಕ ಬಿಜೆಪಿ ಭಾನುವಾರ ಪಕ್ಷ ಸಂಘಟನೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ. ಹಲವು ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸಬರನ್ನು ನೇಮಕ ಮಾಡಲಾಗಿದೆ.

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಹೊಸ ಸಂಪುಟ ರಚನೆಯಾದಾಗ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈ ತಪ್ಪಿತ್ತು.

ನಯನಾ ಗಣೇಶ್ ಅವರನ್ನು ಸಹ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷರ ಸಂಖ್ಯೆ ಈಗ 12ಕ್ಕೆ ಏರಿಕೆಯಾಗಿದೆ. ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರನ್ನು ಅನಿವಾಸಿ ಭಾರತೀಯ ವಿಭಾಗದ ಸಂಚಾಲಕರಾಗಿ ನೇಮಕ ಮಾಡಲಾಗಿದೆ. ರಾಜ್ಯ ವಕ್ತಾರರಾಗಿ ಮೈಸೂರಿನ ಎಂ. ಜಿ. ಮಹೇಶ್ ನೇಮಕಗೊಂಡಿದ್ದಾರೆ.

ಜಿಲ್ಲಾ ಪ್ರಭಾರಿಗಳಾಗಿ ಮಂಡ್ಯ (ಜಗದೀಶ ಹಿರೇಮನಿ), ಯಾದಗಿರಿ (ಅಮರನಾಥ ಪಾಟೀಲ), ದಾವಣಗೆರೆ ( ಕೆ. ಶಿವಲಿಂಗಪ್ಪ), ಚಿತ್ರದುರ್ಗ (ಸಿ. ಆರ್. ಪ್ರೇಮಕುಮಾರ್), ಬೆಂಗಳೂರು ಉತ್ತರ (ಕೆ. ವಿ. ಶಿವಪ್ಪ), ಬಳ್ಳಾರಿ (ಮುರಹರ ಗೌಡ), ವಿಜಯನಗರ (ಚನ್ನಬಸವಗೌಡ) ನೇಮಕ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು