ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ಗೆ ಸ್ಥಳೀಯ ಸಂಸ್ಥೆ ಕ್ಷೇತ್ರಗಳಿಂದ ಡಿಸೆಂಬರ್ 10ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಜಾತ್ಯತೀತ ಜನತಾದಳದಿಂದ ಎಂಟು ಮಂದಿ ಸ್ಪರ್ಧಿಸುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಎಚ್.ಡಿ. ದೇವೇಗೌಡ ಕುಟುಂಬದ ಮೂರನೇ ತಲೆಮಾರಿನ ಇನ್ನೊಬ್ಬರಿಗೆ ಟಿಕೆಟ್ ನೀಡಲಾಗಿದೆ. ಹಾಸನ ಕ್ಷೇತ್ರದಿಂದ ಎಚ್.ಡಿ. ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಅಭ್ಯರ್ಥಿಯಾಗಿದ್ದಾರೆ.
ಮಂಡ್ಯ – ಅಪ್ಪಾಜಿ ಗೌಡ, ತುಮಕೂರು – ಅನಿಲ್ಕುಮಾರ್, ಮೈಸೂರು – ಸಿ.ಎನ್. ಮಂಜೇಗೌಡ, ಕೋಲಾರ – ವಕ್ಕಲೇರಿ ರಾಮು, ಬೆಂಗಳೂರು ಗ್ರಾಮಾಂತರ – ಎಚ್.ಎಂ. ರಮೇಶ್ ಗೌಡ, ಕೊಡಗು – ಎಚ್.ಯು. ಇಸಾಕ್ ಖಾನ್ ಅಭ್ಯರ್ಥಿಗಳಾಗಿದ್ದಾರೆ.
ರಾಜ್ಯದಲ್ಲಿ 25 ವಿಧಾನ ಪರಿಷತ್ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ. 26 ಉಮೇದುವಾರಿಕೆ ಹಿಂಪಡೆಯಲು ಕಡೆ ದಿನವಾಗಿದೆ.
ಡಿಸೆಂಬರ್ 10ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಡಿ. 14ರಂದು ಫಲಿತಾಂಶ ಪ್ರಕಟವಾಗಲಿದೆ.