ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸೋರಿಕೆಯನ್ನು ತಡೆಯುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿ ಬಸ್ ಗಳನ್ನು ತಡೆದು ತಪಾಸಣೆ ನಡೆಸುವ ಕಾರ್ಯವನ್ನು ಮಾಡುತ್ತಲೇ ಬಂದಿದೆ.
ಪ್ರತಿ ತಿಂಗಳು ಟಿಕೆಟ್ ಪಡೆಯದೆ ಪ್ರಯಾಣಿಸುವವರ ಮೇಲೆ ನಿಗಾ ವಹಿಸುತ್ತಿದ್ದು, ಅದರಂತೆ ನವೆಂಬರ್ ತಿಂಗಳಲ್ಲಿ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿದ ಹಿನ್ನಲೆಯಲ್ಲಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,577 ವಾಹನಗಳನ್ನು ತನಿಖೆಗೊಳಪಡಿಸಿರುವುದು ವಿಶೇಷವಾಗಿದೆ.
ಈ ಸಂಬಂಧ 3095 ಪ್ರಕರಣಗಳನ್ನು ಪತ್ತೆ ಹಚ್ಚಿ, 3495 ಟಿಕೇಟ್ ರಹಿತ ಪ್ರಯಾಣಿಕರಿಂದ 5,36,420 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದ್ದಲ್ಲದೆ, ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 62,080 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ, ಅಲ್ಲದೆ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.
ಈ ಕುರಿತಂತೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್, ಪಾಸ್ ಪಡೆದು ಪ್ರಯಾಣ ಮಾಡುವಂತೆ ಸೂಚಿಸಿದ್ದಾರೆ.