ಬೆಂಗಳೂರು: ಹೊಸದಿಲ್ಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು 2020-21ನೇ ಸಾಲಿನಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ರಾಷ್ಟ್ರದ 67 ಕೃಷಿ ವಿಶ್ವವಿದ್ಯಾನಿಲಯಗಳ ಶಿಕ್ಷಣ, ಸಂಶೋಧನೆ, ವಿಸ್ತರಣೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧಿಸಿದ ಗಣನೀಯ ಸೇವೆಯನ್ನು ಮೌಲ್ಯಮಾಪನ ಮಾಡಿ ಕೃಷಿ ವಿಶ್ವವಿದ್ಯಾನಿಲಯಗಳನ್ನು ಶ್ರೇಣಿಕರಿಸಿದೆ.
ಬೆಂಗಳೂರು ಕೃಷಿ ವಿವಿ ದಕ್ಷಿಣ ಭಾರತ ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಪ್ರಥಮ ಸ್ಥಾನ ಪಡೆದಿದೆ. ರಾಷ್ಟ್ರಮಟ್ಟದ ರಾಜ್ಯ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ 3ನೇ ಸ್ಥಾನದಲ್ಲಿದೆ.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ರಾಷ್ಟ್ರ ಮಟ್ಟದಲ್ಲಿ ಕೃಷಿ ಮತ್ತು ಸಂಬಂಧಿಸಿದ ವಿಶ್ವವಿದ್ಯಾನಿಲಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಜಾಗತಿಕ ಮಟ್ಟದಲ್ಲಿ ಉತ್ತಮ ಶ್ರೇಯಾಂಕ ಪಡೆಯುವ ನಿಟ್ಟಿನಲ್ಲಿ ಛಾಪನ್ನು ಮೂಡಿಸಲು ಕೃಷಿ ಮತ್ತು ಸಂಬಂಧಿಸಿದ ವಿಶ್ವವಿದ್ಯಾನಿಲಯಗಳಿಗೆ ಶ್ರೇಯಾಂಕವನ್ನು ನೀಡುತ್ತಿದೆ.
ಶ್ರೇಯಾಂಕವು ವಿದ್ಯಾರ್ಥಿಗಳು ಅತ್ಯುತ್ತಮ ಕೃಷಿ ವಿಶ್ವವಿದ್ಯಾನಿಲಯಗಳನ್ನು ಆಯ್ಕೆಮಾಡಿಕೊಳ್ಳಲು ಮತ್ತು ಕೃಷಿ ವಿಶ್ವವಿದ್ಯಾನಿಲಯಗಳು ಸ್ವಯಂ-ಮೌಲ್ಯಮಾಪನ ಮಾಡಿ ಗುಣಮಟ್ಟ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಲ್ಲಿ ಸಹಾಯವಾಗುತ್ತದೆ. ಕೃಷಿ ವಿಶ್ವವಿದ್ಯಾನಿಲಯಗಳ ನಡುವೆ ಆರೋಗ್ಯಕರ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ.
ಸಿಬ್ಬಂದಿ – ವಿದ್ಯಾರ್ಥಿಗಳ ಅನುಪಾತ, ವಿದ್ಯಾರ್ಥಿವೇತನ ಮತ್ತು ಪ್ರವೇಶಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ವಿದ್ಯಾರ್ಥಿಗಳ ಸಾಧನೆ, ಫೆಲೋಶಿಪ್ ಮತ್ತು ಪ್ರವೇಶಕ್ಕೆ ಸಂಬಂಧಿಸಿದಂತೆ ಸ್ನಾತಕ ವಿದ್ಯಾರ್ಥಿಗಳ ಕಾರ್ಯಕ್ಷಮತೆ, ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಶೇಕಡವಾರು ವಿದ್ಯಾರ್ಥಿಗಳು, ಸೆರ ಬಳಕೆ, ಸಂಶೋಧನಾ ಉತ್ಪಾದಕತೆ ಮತ್ತು ಪ್ರಭಾವ, ಸಂಶೋಧನಾ ಶ್ರೇಷ್ಠತೆ, ಬಾಹ್ಯ ಮೂಲಗಳ ಮೂಲಕ ಪಡೆದ ನಿಧಿಗಳು, ವಿಸ್ತರಣೆ ಚಟುವಟಿಕೆಗಳು ಮತ್ತು ಪಡೆದ ಪ್ರಶಸ್ತಿಗಳನ್ನು ಕೃಷಿ ವಿಶ್ವವಿದ್ಯಾನಿಲಯಗಳ ಶ್ರೇಯಾಂಕಕ್ಕೆ ಪರಿಗಣಿಸಲಾದ ಮಾನದಂಡಗಳಾಗಿವೆ.
ಕಳೆದ ವರ್ಷ ಬೆಂಗಳೂರು ಕೃಷಿ ವಿವಿಯು ಸಂಶೋಧನಾ ಶ್ರೇಷ್ಠತೆ, ವಿದ್ಯಾರ್ಥಿ ವೇತನ ಮತ್ತು ಪ್ರವೇಶಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ವಿದ್ಯಾರ್ಥಿಗಳ ಸಾಧನೆ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಶೇಕಡವಾರು ವಿದ್ಯಾರ್ಥಿಗಳ ಮಾನದಂಡಗಳಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸೆರ ಬಳಕೆಯಲ್ಲಿ ದ್ವಿತೀಯ ಸ್ಥಾನದಲ್ಲಿತ್ತು. ಕೃಷಿಯಲ್ಲಿ 5 ನೂತನ ತಳಿಗಳು ಮತ್ತು 10 ಕೃಷಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ ರೈತರ ಮತ್ತು ಕೃಷಿ ಅಭಿವೃದ್ಧಿಗೆ ಸಹಕಾರಿಯಾಗಿದೆ.