ಬೆಂಗಳೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೂಲಿಕಾರರಿಗೆ ದಿನದ ಕೂಲಿಯನ್ನು ₹309ಕ್ಕೆ ಹೆಚ್ಚಿಸಲಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈವರೆಗೆ ದಿನಕ್ಕೆ ₹289 ನೀಡಲಾಗುತ್ತಿತ್ತು ಎಂದರು. ಅಲ್ಲದೆ, ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರ 2022-23ನೇ ಸಾಲಿಗೆ ರಾಜ್ಯಕ್ಕೆ 13 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಜನೆಯ ಗುರಿ ನಿಗದಿ ಮಾಡಿದೆ. ಇದರಿಂದ ರಾಜ್ಯಕ್ಕೆ ನರೇಗಾ ಯೋಜನೆಯಡಿ ₹7,096 ಕೋಟಿ ಅನುದಾನ ಸಿಗುತ್ತದೆ ಎಂದರು.
2021-22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ 16 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆ ಗುರಿ ನೀಡಲಾಗಿತ್ತು. ಇಲ್ಲಿಯವರೆಗೆ 16.28 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆ ಮಾಡುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ. ಅಲ್ಲದೆ, 33.86 ಲಕ್ಷ ಕುಟುಂಬಗಳ 63.81 ಲಕ್ಷ ಜನರಿಗೆ ಕೆಲಸ ನೀಡಲಾಗಿದೆ. ಕೆಲಸ ಮಾಡಿದ ಕೂಲಿಕಾರರಿಗೆ ₹4,607.64 ಕೋಟಿಗಳನ್ನು ನೇರವಾಗಿ ಕೂಲಿಕಾರರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದರು.