ಬೆಂಗಳೂರು : ಮೇಕೆದಾಟು ಯೋಜನೆ ಪಾದಯಾತ್ರೆ ನಿಲ್ಲಿಸದಿದ್ದರೆ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಪಾದಯಾತ್ರೆ ನಿಲ್ಲಿಸದಿದ್ದರೆ, ಏನೇನು ಮಾಡಬಹುದು ಅದನ್ನು ಮಾಡುತ್ತೇವೆ.
ಒಂದು ಹೆಜ್ಜೆ ಮುಂದಕ್ಕೆ ಹೋಗಲುಬಿಡಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪಾದಯಾತ್ರೆ ನಿಲ್ಲಿಸಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಕಾಂಗ್ರೆಸ್ ನವರು ಯಾರ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆಯನ್ನು ಯಾವ ಪಕ್ಷವೂ ವಿರೋಧಿಸಿಲ್ಲ. ಮೇಕೆದಾಟು ಯೋಜನೆ ಬಗ್ಗೆ ಮಾತನಾಡಲು ಕಾಂಗ್ರೆಸ್ ನವರಿಗೆ ಯಾವುದೇ ಬದ್ಧತೆ ಇಲ್ಲ. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ವೀರಪ್ಪ ಮೊಯ್ಲಿ, ಮಲ್ಲಾಜಮ್ಮ ಸೇರಿದಂತೆ ಹಲವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೇಕೆದಾಟು ಪಾದಯಾತ್ರೆ ಕೊರೊನಾ ಹರಡುವ ಪಾದಯಾತ್ರೆಯಾಗಿದೆ. ಕಾಯ್ದೆ ಪ್ರಕಾರ ಜಿಲ್ಲಾಡಳಿತಕ್ಕ ಬಂದೋಬಸ್ತ್ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.