ಬೆಂಗಳೂರು: ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ. ಆಡಳಿತ, ರಾಜಕೀಯ, ನ್ಯಾಯಾಂಗವನ್ನು ಪ್ರಶ್ನಿಸುವ ಶಕ್ತಿ ಮಾಧ್ಯಮಗಳಿಗಿದೆ. ಪ್ರಚಲಿತ ವಿದ್ಯಮಾನಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಮಾಧ್ಯಮಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಪ್ರೆಸ್ಕ್ಲಬ್ನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ 2019 – 20ನೇ ಸಾಲಿನ ವಿಶೇಷ ಘಟಕಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ 18 ಮಂದಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು 7 ಮಂದಿ ಪರಿಶಿಷ್ಟ ಪಂಗಡ (ಎಸ್ಟಿ) ಒಟ್ಟು 25 ಮಂದಿ ಪತ್ರಿಕೆ ಸಂಪಾದಕರು, ವರದಿಗಾರರಿಗೆ ಉಚಿತ ಲ್ಯಾಪ್ಟಾಪ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ, ಅಭ್ಯರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಿ ಮಾತನಾಡಿದ ಸಚಿವರು, ಬಡವರಿಗೆ ಮನೆ, ಕುಡಿಯುವ ನೀರು, ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ, ಮೂಲಭೂತ ಸೌಕರ್ಯಗಳು ಒದಗಿಸುವುದೇ ಸಮಾಜ ಕಲ್ಯಾಣ ಇಲಾಖೆಯ ಮೊದಲ ಅದ್ಯತೆ. ಸರ್ಕಾರದ ಪ್ರತಿ ಪೈಸೆಯೂ ಸದುಪಯೋಗವಾಗಬೇಕು. ಎಲ್ಲಾ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆರ್ಥಿಕ ದುರ್ಬಲರಿಗೆ ಸರ್ಕಾರದ ಯೋಜನೆಗಳು ದೊರೆಯಬೇಕು ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಸದಾಶಿವ ಶಣೈ ಮಾತನಾಡಿ, ಅಕಾಡೆಮಿ 40ರ ಸಂಭ್ರಮದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೆಲವೇ ದಿನಗಳಲ್ಲಿ 40 ಧೀಮಂತ ಪತ್ರಕರ್ತರ ಬಗ್ಗೆ ಪುಸ್ತಕಗಳನ್ನು ಹೊರತರಲಾಗುವುದು. ಸರ್ಕಾರದ ಪೂರ್ಣ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಲ್ಯಾಪ್ಟಾಪ್ ಆಯ್ಕೆ ಸಮಿತಿಯು ಅತ್ಯಂತ ಪಾರದರ್ಶಕವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರದಿಗಾರರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ವಿಧಾನಪರಿಷತ್ನ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಸರ್ಕಾರದ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ಸಿಗಬೇಕು. ಪ್ರತಿಯೊಬ್ಬರು ಆರ್ಥಿಕವಾಗಿ ಮುಂದೆ ಬರಬೇಕು ಎಂದರು.
ವಾರ್ತಾ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್. ಹರ್ಷ, ಅಕಾಡೆಮಿಯ ಸದಸ್ಯರಾದ ಕೆ.ಕೆ.ಮೂರ್ತಿ, ಕಾರ್ಯದರ್ಶಿಗಳಾದ ಶ್ರೀಮತಿ ಸಿ.ರೂಪಾ, ಶಿವಕುಮಾರ್ ಬೆಳ್ಳಿತಟ್ಟೆ ಅವರು ಉಪಸ್ಥಿತರಿದ್ದರು.