News Karnataka Kannada
Monday, April 29 2024
ಬೆಂಗಳೂರು ನಗರ

ಬಿಜೆಪಿ ಜನಸ್ವರಾಜ್ ಯಾತ್ರೆಯನ್ನು ಟೀಕಿಸಿ ಕುಮಾರಸ್ವಾಮಿ ಸರಣಿ ಟ್ವೀಟ್

Hd Kumara Swamy 15 7 21
Photo Credit :

ಬೆಂಗಳೂರು: ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ಜನಸ್ವರಾಜ್ ಯಾತ್ರೆಯನ್ನು ಟೀಕಿಸಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

‘ರಾಜ್ಯದ ಜನತೆ ಕೋವಿಡ್ ಮಹಾಮಾರಿಯಿಂದ ತತ್ತರಿಸಿದ ಜನರು ಮತ್ತೆ ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ’ ಎಂದು ಟ್ವೀಟ್ ಮಾಡಿದ್ದಾರೆ.

ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್‌ನಲ್ಲಿ 7.31 ಲಕ್ಷ ಹೆಕ್ಟೇರ್‌ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ.

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ಕಾಫಿ ತೋಟಗಳು ಪೂರ್ಣ ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳಲ್ಲಿ ಮಳೆ ಪ್ರಳಯವನ್ನೇ ಸೃಷ್ಟಿಸಿದೆ. ಕೆರೆಕಟ್ಟೆಗಳು ಒಡೆದುಹೋಗಿ ಗ್ರಾಮಗಳಿಗೆ ಸಂಪರ್ಕವೇ ತಪ್ಪಿಹೋಗಿದೆ. ಹಳ್ಳಿಗಳು ನಡುಗಡ್ಡೆಗಳಾಗಿವೆ. ತೋಟಗಳು ಕೆರೆಗಳಾಗಿವೆ.

ಕೋಲಾರ ಜಿಲ್ಲೆ ಒಂದರಲ್ಲೇ ಅತಿ ಹೆಚ್ಚು ಬೆಳೆ ನಾಶವಾಗಿದೆ. ಮಾಧ್ಯಮಗಳಿಗೆ ಅಧಿಕಾರಿಗಳೇ ಕೊಟ್ಟಿರುವ ಮಾಹಿತಿಯಂತೆ ಆ ಒಂದು ಜಿಲ್ಲೆಯಲ್ಲೇ 34,447 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ಮಳೆ ನುಂಗಿದೆ. 14 ಜಿಲ್ಲೆಗಳಲ್ಲಿ 48,000 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಫಸಲು ರೈತರ ಕೈಗೆ ಸಿಕ್ಕಿಲ್ಲ.

ಕರ್ನಾಟಕದ ರೈತರು ಇಷ್ಟು ದೊಡ್ಡ ಸಂಕಷ್ಟಕ್ಕೆ ಹಿಂದೆಂದೂ ಸಿಲುಕಿರಲಿಲ್ಲ. ಈ ವಿಷಯದಲ್ಲಿ ರಾಜ್ಯ ಸರಕಾರ ಮಾಡಿರುವುದೇನು? ಸಚಿವರು ಎಲ್ಲಿದ್ದಾರೆ? ಅಧಿಕಾರಿಗಳೇನು ಮಾಡುತ್ತಿದ್ದಾರೆ? ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ.

ಜಿಲ್ಲೆಗಳಿಗೆ ಕೋವಿಡ್‌ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ? ಅನೇಕ ಸಚಿವರಂತೂ ಜಿಲ್ಲೆಗಳ ಕಥೆ ಹಾಗಿರಲಿ, ಅವರ ಕಚೇರಿಗಳಲ್ಲೇ ಪತ್ತೆ ಇಲ್ಲ. ಮುಖ್ಯಮಂತ್ರಿಗಳು ಕೂಡಲೇ ಸಚಿವರನ್ನು ಜಿಲ್ಲೆಗಳಿಗೆ ಅಟ್ಟಬೇಕು. ಮಳೆ-ಬೆಳೆ ಪರಿಹಾರ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಬೇಕು.

ಇಷ್ಟೆಲ್ಲ ಅನಾಹುತ ಆಗುತ್ತಿದ್ದರೂ ಕೃಷಿ ಸಚಿವರು, ಅವರ ಇಲಾಖೆ ಹಾಗೂ ಕಂದಾಯ ಇಲಾಖೆ ಏನು ಮಾಡುತ್ತಿದೆ? ಈಗಾಗಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಲಾಗಿದೆಯಾ? ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ.

ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ. ಕೃಷಿ ಕಾಯ್ದೆ ವಾಪಸ್‌ ಪಡೆದೆವು ಎಂದು ಬೀಗುತ್ತಾ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಸರಕಾರವು ಅಧಿಕಾರ ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೆಯಬಾರದು ಎಂದು ಸರಣಿ ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು