ಬೆಂಗಳೂರು (ಫೆ. 05) : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಿವಿಧ ಸಂಘಗಳು, ವ್ಯಕ್ತಿಗಳು ನಡೆಸುವ ಮೆರವಣಿಗೆ, ಪ್ರತಿಭಟನೆ, ಧರಣಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅಧಿಕಾರ ನೀಡಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.
ಬೆಂಗಳೂರು ಹೃದಯ ಭಾಗದಲ್ಲಿ ಅಸಂಘಟಿತ ರೀತಿಯಲ್ಲಿ ನಡೆಯುವ ದೊಡ್ಡ ಮಟ್ಟದ ಪ್ರತಿಭಟನೆಗಳು ಮತ್ತು ಮೆರವಣಿಗೆಗಳು ವಾಹನ ಸಂಚಾರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ. ಈ ಪ್ರತಿಭಟನೆಗಳಿಂದ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಸುದ್ದಿ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತ ರಿಟ್ ಅರ್ಜಿ ದಾಖಲಿಸಿಕೊಂಡು ಕೆಲ ನಿರ್ದೇಶನ ನೀಡಿತ್ತು.
ಅಂತೆಯೆ ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಕೆಲವು ನಿರ್ದೇಶನ ನೀಡಿತ್ತು. ಈ ನಿರ್ದೇಶನಗಳನ್ವಯ ಕಾನೂನನ್ನು ಗಮನದಲ್ಲಿರಿಸಿಕೊಂಡು ಹೈಕೋರ್ಟ್ ನಾಗರಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮೆರವಣಿಗೆಗಳು ಮತ್ತು ಪ್ರತಿಭಟನೆಗಳನ್ನು ನಿಯಂತ್ರಿಸಲು ಸಮರ್ಪಕ ಕಾರ್ಯ ವಿಧಾನವನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಶೀಘ್ರ ನಿಯಮ: ಹೈಕೋರ್ಟ್ನ ನಿರ್ದೇಶನ ಮೇರೆಗೆ ಇದೀಗ ರಾಜ್ಯ ಸರ್ಕಾರ ನಗರ ಪೊಲೀಸ್ ಆಯುಕ್ತರಿಗೆ ಅಧಿಕಾರವನ್ನು ನೀಡಿ ಆದೇಶ ಹೊರಡಿಸಿದೆ. ಅದರಂತೆ ನಗರ ಪೊಲೀಸರು ತಮಗೆ ಸಿಕ್ಕಿರುವ ಅಧಿಕಾರ ಬಳಸಿ ಬೆಂಗಳೂರು ನಗರ ವ್ಯಾಪ್ತಿಗೆ ಒಳಪಟ್ಟಂತೆ ‘ಲೈಸೆನ್ಸಿಂಗ್ ಆಯಂಡ್ ರೆಗ್ಯುಲೇಷನ್ ಆಫ್ ಪ್ರೊಟೆಸ್ಟ್, ಡೆಮಾಸ್ಪ್ರೇಷನ್ಸ್ ಆಯಂಡ್ ಪ್ರೊಟೆಸ್ಟ್ ಮಾಚ್ರ್ (ಬೆಂಗಳೂರು ಸಿಟಿ) ಆರ್ಡರ್ 2021’ರ ಆದೇಶ ಹೊರಡಿಸಿದ್ದಾರೆ.
ಈ ಆದೇಶವನ್ನು ಸಂಪೂರ್ಣವಾಗಿ ಅವಲೋಕಿಸಿ ಮುಂದಿನ ದಿನಗಳಲ್ಲಿ ಈ ವಿಷಯವಾಗಿ ನಿಯಮಗಳನ್ನು ರೂಪಿಸಲಾಗುತ್ತದೆ. ಈ ನಿಯಮಗಳನ್ನು ನಗರದಲ್ಲಿ ಕಾರ್ಯರೂಪಕ್ಕೆ ತರಲು ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಅಧೀನ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.