ಬೆಂಗಳೂರು: ಕನ್ನಡ ಉಳಿವಿಗಾಗಿ ಹೆಚ್ಚೆಚ್ಚು ಕನ್ನಡ ಭಾಷೆಯನ್ನು ಬಳಸಬೇಕು. ತಂತ್ರಜ್ಞಾನ ಮೂಲಕ ಕನ್ನಡವನ್ನು ಉಳಿಸಿ, ಬೆಳೆಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ನಿಂದಾಗಿ ಸರಳವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಇಂದು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ಕರ್ನಾಟಕದ ಪರವಾಗಿ ಪ್ರಧಾನಮಂತ್ರಿಗೆ ಧನ್ಯವಾದ ಹೇಳುತ್ತೇನೆ. ಮುಂದಿನ ಒಂದು ವರ್ಷವನ್ನು ಕನ್ನಡ ಕಾಯಕ ವರ್ಷ ಎಂದು ಕಾರ್ಯಕ್ರಮ ರೂಪಿಸಲಾಗುತ್ತದೆ. ಇದಕ್ಕಾಗಿ ರೂಪುರೇಷೆಗಳನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಕನ್ನಡದ ಉಳಿವಿಗಾಗಿ ಹೆಚ್ಚು ಕನ್ನಡ ಭಾಷೆಯನ್ನು ಬಳಸಬೇಕು. ದೈನಂದಿನ ಜೀವನದಲ್ಲಿ ಕನ್ನಡ ಮಾತಾಡಬೇಕು, ಬರೆಯಬೇಕು. ಮನೆಗಳಲ್ಲಿ ಮಕ್ಕಳ ಜತೆ ಕನ್ನಡದಲ್ಲಿಯೇ ಮಾತನಾಡುವುದರಿಂದ, ಹೆಚ್ಚೆಚ್ಚು ಕನ್ನಡ ಭಾಷೆಯನ್ನು ಬೆಳೆಸಬಹುದು ಎಂದರು.
ಸಚಿವ ಎಸ್.ಸುರೇಶ್ ಕುಮಾರ್ ಅವರು ನಾಡಧ್ವಜಾರೋಹಣ ನೆರವೇರಿಸಿದರು.