ಬೆಂಗಳೂರು : ಕರ್ನಾಟಕ ವನ್ನು ಭಿಕ್ಷಾಟನೆ ಮುಕ್ತ ಮಾಡಲು ಮುಂದಿನ ವಾರ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ವಿಧಾನ ಪರಿಷತ್ನಲ್ಲಿ ಸದಸ್ಯ ಕೆ.ಗೋವಿಂದರಾಜು ಅವರ ಪ್ರಶ್ನೆ ಕೇಳಿ, 2021ರಲ್ಲಿ ಆರು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿ ಮಕ್ಕಳನ್ನು ರಕ್ಷಿಸಲಾಗಿದೆ. ಭಿಕ್ಷಾಟನೆ ನಿರ್ಮೂಲನೆಗಾಗಿ ಬಿಬಿಎಂಪಿ 280 ಕೋಟಿ ಸೇರಿ ಸುಮಾರು 400 ಕೋಟಿ ರೂ.ಗಳನ್ನು ಸ್ಥಳೀಯ ಸಂಸ್ಥೆಗಳು ಸೆಸ್ ರೂಪದಲ್ಲಿ ಸಂಗ್ರಹಿಸಿವೆ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಮಾತನಾಡಿ, ಕರ್ನಾಟಕವನ್ನು ಭಿಕ್ಷಾಟನೆ ಮುಕ್ತ ರಾಜ್ಯವನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅದಕ್ಕೆ ಉತ್ತರ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಪೊಲೀಸ್, ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಂಟಿಯಾಗಿ ಕೆಲಸ ಮಾಡುತ್ತಿವೆ. ನಮ್ಮ ಇಲಾಖೆಯಿಂದ ರಕ್ಷಣೆ ಮಾಡಲಾದ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಾಗುತ್ತಿದೆ ಎಂದರು.
ರಾಜ್ಯ 14 ಜಿಲ್ಲೆಗಳಲ್ಲಿ ನಿರಾಶ್ರಿತ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಈ ವರ್ಷ 6 ಮಂಜೂರಾಗಿವೆ. ಇನ್ನೂ 12 ಜಿಲ್ಲೆಗಳಲ್ಲೂ ಈ ವರ್ಷವೇ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ಯಾರದೋ ಮಕ್ಕಳನ್ನು ಸೋಂಟಕ್ಕೆ ಕಟ್ಟಿಕೊಂಡು ಭಿಕ್ಷಾಟನೆ ಮಾಡಲಾಗುತ್ತಿದೆ. ಇದನ್ನು ನಿಯಂತ್ರಿಸಲು ಮೂರು ಇಲಾಖೆಗಳ ಜೊತೆ ಮುಂದಿನ ವಾರ ಸಭೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಸದಸ್ಯೆ ಭಾರತಿ ಶೆಟ್ಟಿ ಅವರು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೇಲ್ಗಳ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಒಂದುವರೆ ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಎಲ್ಲಾ ಹಾಸ್ಟೆಲ್ಗಳಿಗೆ ಆವರಣ ಗೋಡೆ ನಿರ್ಮಿಸಿ, ಸಿಸಿಟಿವಿ ಅಳವಡಿಸಿ ಮಕ್ಕಳ ಸುರಕ್ಷತೆ ಆದ್ಯತೆ ನೀಡಲಾಗುವುದು. ಅಕಾರಿಗಳು ತಪ್ಪು ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.