ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಪ್ರಕರಣ ರಾಜಕೀಯವಾಗಿ ಮಹತ್ವ ಪಡೆದುಕೊಳ್ಳಲಿರುವುದರಿಂದ ಮತ್ತು ಸರ್ಕಾರದ ಅಸ್ತಿತ್ವದ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಮೇಲ್ಮಟ್ಟದ ಅಧಿಕಾರಿಗಳಿಂದ ಆರಂಭಿಸಿ ಸಬ್ಇನ್ಸ್ಪೆಕ್ಟರ್ ವರೆಗಿನ ಅಧಿಕಾರಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಜ್ಯದ ಇತರೆ ಭಾಗಕ್ಕೆ ವರ್ಗಾಯಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ದಕ್ಷಿಣಕನ್ನಡದ ಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು, ಪ್ರಕರಣದ ಕುರಿತು ರಾಜ್ಯಪಾಲ ವಿ.ಆರ್.ವಾಲಾ ಅವರು ಕೇಂದ್ರ ಗೃಹ ಇಲಾಖೆಗೆ ವರದಿ ನೀಡಲು ಮುಂದಾಗಿರುವುದು ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಹೇಳಿರುವುದು ಎಲ್ಲವೂ ಸರ್ಕಾರದ ಮೇಲೆ ಪರಿಣಾಮ ಬೀರಲಿದೆ.
ಈ ಪ್ರಕರಣವನ್ನು ಬಳಸಿಕೊಂಡು ಬಿಜೆಪಿ ರಾಜಕೀಯವಾಗಿ ಲಾಭ ಪಡೆಯುವ ಹುನ್ನಾರದಲ್ಲಿರುವುದರಿಂದಾಗಿ ಅನಿವಾರ್ಯವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ. ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯ ವೇಳೆ ಕೇವಲ ಮಂಗಳೂರು ಅಲ್ಲದೆ ಉಡುಪಿ ಹಾಗೂ ಕಾರವಾರ ಭಾಗದಲ್ಲೂ 5ರಿಂದ 10 ವರ್ಷಗಳಿಂದ ಬೀಡು ಬಿಟ್ಟಿರುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಲು ಸಂಬಂಧ ಮಾಹಿತಿ ಪಡೆದಿದ್ದರು ಎಂದು ಹೇಳಲಾಗಿದೆ.
ಒಂದೂವರೆ ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೇರಿದಂತೆ ಅನೇಕ ನಡೆದಿರುವ ಕೋಮು ಗಲಭೆಯನ್ನು ನಿಭಾಯಿಸಲು ಪೊಲೀಸರು ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನಲೆಯಲ್ಲಿ ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮುಂದಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿರುವ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಎತ್ತಂಗಡಿ ಆಗುವ ಸಾಧ್ಯತೆ ಹೆಚ್ಚಿದೆ. ಅವರ ಸ್ಥಾನಕ್ಕೆ ಈಶಾನ್ಯ ವಲಯದ ಐಜಿಪಿ ಅಲೌಕ್ ಕುಮಾರ್ ಅವರನ್ನು ತರುವ ಸಾಧ್ಯತೆಯಿದೆ. ವರ್ಗಾವಣೆ ಪ್ರಕ್ರಿಯೆ ಶೀಘ್ರವೇ ನಡೆಯಲಿದ್ದು, ಬಹಳಷ್ಟು ಅಧಿಕಾರಿಗಳು ಎತ್ತಂಗಡಿಯಾಗುವುದು ಬಹುತೇಕ ಖಚಿತವಾಗಿದೆ.