ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಹತ್ತು ತಿಂಗಳು ಬಾಕಿಯಿವೆ. ಹೀಗಿರುವಾಗ ಆಡಳಿತ ಪಕ್ಷ ಕಾಂಗ್ರೆಸ್ ಒಂದೆಡೆ ಸಜ್ಜಾಗುತ್ತಿದ್ದರೆ, ವಿರೋಧ ಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಅದಾಗಲೇ ಪ್ರಚಾರಕ್ಕಿಳಿದಾಗಿದೆ.
ವಿವಿಧ ಕಾರ್ಯಕ್ರಮಗಳ ಮೂಲಕ ಮತದಾರರ ಮನೆ ತಲುಪುವ ಕೆಲಸವನ್ನು ಮಾಡುತ್ತಿದೆ. ಜೆಡಿಎಸ್ ರಾಷ್ಟ್ರಾಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಪ್ರತ್ಯೇಕವಾಗಿ ಕಾರ್ಯಕರ್ತರ ಸಮಾವೇಶ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.
ರಾಜ್ಯ ಸರ್ಕಾರ ತನ್ನ ಯೋಜನೆ, ವಿವಾದ ಪ್ರಕರಣ ಸೇರಿದಂತೆ ಹಲವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಕೆಲವು ಮುಗಿಯದ ಕಾಮಗಾರಿಗಳನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡುವುದು, ಹೊಸ ಯೋಜನೆಗಳನ್ನು ಘೋಷಿಸುವುದು ಹೀಗೆ ಹಲವು ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಕಂಡು ಬರುತ್ತಿದೆ. ಇನ್ನು ಟಿಕೆಟ್ ಪಡೆಯುವ ವಿಚಾರಗಳಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿರುವುದರಿಂದ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಕಾಂಗ್ರೆಸ್ ಗೆ ಜಿಲ್ಲೆಯಾದ್ಯಂತ ಸ್ಪರ್ಧಿಸಲು ಅಭ್ಯರ್ಥಿಗಳಿದ್ದಾರೆ. ಆದರೆ ಜೆಡಿಎಸ್ ಗೆ ಕೆಲವು ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯಲು ನಾಯಕರೇ ಇಲ್ಲದಾಗಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಜೆಡಿಎಸ್ ಹವಾ ಇಲ್ಲದಾಗಿದೆ. ಹಳೆ ಮೈಸೂರು ವ್ಯಾಪ್ತಿಯಲ್ಲಿ ಪ್ರಾಬಲ್ಯ ಹೊಂದಿದ್ದು, ಈ ಭಾಗದಲ್ಲಷ್ಟ್ಟೆಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯನಾ? ಎಂಬ ಪ್ರಶ್ನೆಯೂ ಕಾಡುತ್ತದೆ.
ಇನ್ಮುಂದೆ ಬರುವ ಚುನಾವಣೆಗಳನ್ನು ಲಗುವಾಗಿ ಪರಿಗಣಿಸುವಂತಿಲ್ಲ. ಜೊತೆಗೆ ಹಿಂದಿನ ಲೆಕ್ಕಾಚಾರಗಳನ್ನು ಮುಂದಿಟ್ಟುಕೊಂಡು ಗೆಲ್ಲಬಹುದು ಎಂಬ ಭ್ರಮೆಯಲ್ಲಿ ತೇಲುವಂತಿಲ್ಲ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮುಖಂಡರು ಈಗಾಗಲೇ ಬಹಿರಂಗ ಹಾಗೂ ವಿಭಾಗ ಮಟ್ಟದ ಸಭೆ-ಸಮಾರಂಭಗಳನ್ನು ಮಾಡತೊಡಗಿದ್ದು, ಮತದಾರರ ಸೆಳೆಯುವ ತಂತ್ರ ಮಾಡುತ್ತಿದ್ದಾರೆ. ಮುಂದಿನ ದಿನಗಳು ಹೇಗಿಲಿರಬಹುದು ಎಂಬದು ಮಾತ್ರ ಕುತೂಹಲಕಾರಿಯಾಗಿದೆ.