ಬೆಂಗಳೂರು : ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಮದ್ಯದ ಅಮಲಿನಲ್ಲಿದ್ದ ಪ್ರೇಯಸಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಪ್ರೇಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರೇಯಸಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಬಳಿಕ ಆಸ್ಪತ್ರೆಗೆ ದಾಖಲಿಸಿ ಸುಳ್ಳು ವಿಳಾಸ ಕೊಟ್ಟು ಪರಾರಿಯಾಗಿದ್ದ ಪ್ರಿಯಕರ ಮಂಜುನಾಥ್ ಎಂಬಾತನನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ಮಂಡ್ಯ ಜಿಲ್ಲೆ ಮಳವಳ್ಳಿ ಮೂಲದ ಮಂಜುನಾಥ್ (40) ಬಂಧಿತ ಆರೋಪಿಯಾಗಿದ್ದು, ಆರೋಪಿ ಜ.6ರಂದು ತನ್ನ ಪ್ರೀಯತಮೆ ಮಂಜುಳಾ ಎಂಬಾಕೆಯನ್ನು ಕೊಲೆಗೈದಿದ್ದ. ಏಳು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಮಂಜುನಾಥ್ ಅವಿವಾಹಿತನಾಗಿದ್ದು, ಬಾರ್ ಬೆಡ್ಡಿಂಗ್ ಕೆಲಸ ಮಾಡುತ್ತಿದ್ದ. ಕೋಣನಕುಂಟೆಯ ಬೀರೇಶ್ವರನಗರದಲ್ಲಿ ವಾಸವಾಗಿದ್ದ. ಹಲವು ಮಹಿಳೆಯರ ಜತೆ ಸಂಬಂಧ ಬೆಳೆಸಿಕೊಂಡಿದ್ದ. ಈ ಮಧ್ಯೆ ವೇಶ್ಯಾವಾಟಿಕೆ ದಂಧೆ ನಡೆಸುವ ಲಕ್ಷ್ಮೀ ಎಂಬಾಕೆ ಮೂಲಕ ಮಂಜುಳಾ ಪರಿಚಯವಾಗಿತ್ತು. ವಿವಾಹಿತೆಯಾಗಿದ್ದ ಮಂಜುಳಾ, ಪತಿಯಿಂದ ದೂರವಾಗಿದ್ದಳು. ಇಬ್ಬರು ಮಕ್ಕಳು ಸಂಬಂಧಿಕರ ಮನೆಯಲ್ಲಿದ್ದರು. ದುರ್ನಡತೆಯಿಂದ ಸಂಬಂಧಿಕರು ಈಕೆಯನ್ನು ಮನೆಯಿಂದ ಹೊರ ಹಾಕಿದ್ದರು.
ಹೀಗಾಗಿ ಮಡಿವಾಳದಲ್ಲಿ ಬಾಡಿಗೆ ಮನೆಯಲ್ಲಿದ್ದು, ಹೌಸ್ಕೀಪಿಂಗ್ ಕೆಲಸಕ್ಕೆ ಹೋಗುತ್ತಿದ್ದಳು. ಲಕ್ಷ್ಮೀ ಮೂಲಕ ಪರಿಚಯವಾದ ಆರೋಪಿ ಮಂಜುನಾಥ್ ಜತೆ ಸಂಬಂಧ ಬೆಳೆಸಿಕೊಂಡು, ಕೋಣನಕುಂಟೆಯಲ್ಲಿರುವ ಆತನ ಮನೆಯಲ್ಲಿಯೇ ವಾಸವಾಗಿದ್ದಳು. ಸುಮಾರು 16 ವರ್ಷಗಳಿಂದ ಮದ್ಯದ ಚಟ ಅಂಟಿಸಿಕೊಂಡಿದ್ದ ಮಂಜುಳಾ ಪ್ರತಿ ನಿತ್ಯ ಕುಡಿಯುತ್ತಿದ್ದಳು. ಪ್ರಿಯಕರನೇ ಆಕೆಗೆ ಮದ್ಯ ತುಂದು ಕೊಡುತ್ತಿದ್ದ. ಈ ನಡುವೆ ಆಕೆ ಪರ ಪುರುಷರ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಗಲಾಟೆಯಾಗಿ ಗಲಾಟೆಯಿಂದ ಆಕ್ರೋಶಗೊಂಡ ಮಂಜುನಾಥ್ ಮಂಜಳಾಳನ್ನು ಹೊಡೆದು ಕೊಂದು ಹಾಕಿದ್ದಾನೆ. ತಲೆಯನ್ನು ಗೋಡೆಗೆ ಗುದ್ದಿಸಿ, ಬಳಿಕ ಬಾರ್ ಬೆಡ್ಡಿಂಗ್ ಕೆಲಸಕ್ಕೆ ಬಳಸುವ ಸುತ್ತಿಗೆಯಿಂದ ಆಕೆಯ ತೊಡೆ, ಬೆನ್ನಿಗೆ ಹೊಡೆದು ಮೂಳೆ ಮುರಿದಿದ್ದು, ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ
ಮೃತ ದೇಹಕ್ಕೆ ಸ್ನಾನ ಮಾಡಿಸಿದ್ದ ಪ್ರಿಯತಮ
ಆಕೆ ಮೃತಪಟ್ಟಿರುವುದನ್ನು ಖಾತ್ರಿ ಪಡಿಸಿಕೊಂಡು ಕೆಲ ಹೊತ್ತಿನ ಬಳಿಕ ಮೃತದೇಹಕ್ಕೆ ಸ್ನಾನ ಮಾಡಿಸಿ, ಬಟ್ಟೆ ಬದಲಿಸಿದ್ದಾನೆ. ರಾತ್ರಿಯಿಡಿ ಮೃತದೇಹದ ಜತೆಯೇ ಇದ್ದು, ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದ್ದಾಳೆಂದು ಮನೆ ಮಾಲೀಕರ ಸಹಾಯ ಪಡೆದು ಜಯನಗರದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದ. ಚಿಕಿತ್ಸೆ ನೀಡಿದ ವೈದ್ಯರು ಮೃತಪಟ್ಟಿದ್ದಾಳೆಂದು ದೃಢಪಡಿಸಿದ್ದರು. ಆಗ ಆರೋಪಿ ಚುಂಚಘಟ್ಟ ಎಂದು ಸುಳ್ಳು ವಿಳಾಸ ನೀಡಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆಕೆಯ ವಿಳಾಸ ಪತ್ತೆ ಹಚ್ಚಿದಾಗ ಸುಳ್ಳು ಎಂಬುದು ಗೊತ್ತಾಗಿದೆ.
ನಂತರ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಪೊಲೀಸರು, ನಗರದಲ್ಲೇ ತಲೆಮರೆಸಿಕೊಂಡಿದ್ದ ಆರೋಪಿ ಬುಧವಾರ ರಾತ್ರಿ ಬೈನಪಾಳ್ಯ ಬಸ್ ನಿಲ್ದಾಣದಲ್ಲಿ ಊರಿಗೆ ತೆರಳಲು ಮುಂದಾಗಿದ್ದಾಗ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಈ ಹಿಂದೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಒಂದು ತಿಂಗಳು ಜೈಲು ಸೇರಿದ್ದ ಎಂಬುದು ಗೊತ್ತಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಬೆಂಗಳೂರಿನ ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ