ಬೆಂಗಳೂರು: ಕರ್ನಾಟಕ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಗೆ ಆಯ್ಕೆಗೊಂಡ ನಾಲ್ಕು ಸದಸ್ಯರು ಏ.2ರಂದು ನಿವೃತ್ತರಾಗಲಿರುವುದರಿಂದ ಅವರ ಸ್ಥಾನಗಳನ್ನು ತುಂಬಲು ರಾಜ್ಯಸಭೆಗೆ ದ್ವೈವಾರ್ಷಿಕ ಚುನಾವಣೆ ಮಾ.23ರಂದು ನಡೆಯಲಿದೆ.
ಈ ಸಂಬಂಧ ಮಾ.5ರಂದು ಸೋಮವಾರ ಅಧಿಸೂಚನೆ ಹೊರಡಿಸಲಾಗಿದೆ. ಮಾ.12 ಸೋಮವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾ.13ರ ಮಂಗಳವಾರ ನಾಮಪತ್ರ ಪರಿಶೀಲನೆ, ಮಾ. 15ರ ಗುರುವಾರ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಮಾರ್ಚ್ 23ರ ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5ಕ್ಕೆ ಮತಗಳ ಎಣಿಕೆ ನಡೆಯಲಿದೆ.
ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯವರಾದ ಎ.ಎಸ್. ಮೂರ್ತಿ ಅವರು ಚುನಾವಣಾಧಿಕಾರಿಯಾಗಿ ಹಾಗೂ ಜಂಟಿ ಕಾರ್ಯದರ್ಶಿ ಎಂ.ಎಸ್. ಕುಮಾರಸ್ವಾಮಿ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾ.5 ರಿಂದ 12ರವರೆಗೆ ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಮಾ.10 ಎರಡನೇ ಶನಿವಾರ ಮತ್ತು 11 ಭಾನುವಾರ ಸಾರ್ವತ್ರಿಕ ರಜಾ ದಿನಗಳಾಗಿರುವುದರಿಂದ ಆ ದಿನಗಳಂದು ನಾಮಪತ್ರಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.