ಬೆಂಗಳೂರು,ಮಾ.22 : ತಮಿಳುನಾಡಿನ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಕೈಗೊಂಡಿರುವ ಕ್ರಮವನ್ನು ಖಂಡಿಸಿರುವ ಸಚಿವ ಆರ್.ಅಶೋಕ್, ಈ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ.
ನಮ್ಮ ನಿಲುವು ಅಚಲವಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರು ವಿಚಾರದಲ್ಲಿ ತಮಿಳುನಾಡಿನಲ್ಲಿ ಯಾವುದೇ ಸರ್ಕಾರ ಬಂದರೂ ಈ ರೀತಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಮೇಕೆದಾಟು ಯೋಜನೆಯನ್ನು ರಾಜಕೀಯ ಲಾಭಕ್ಕಾಗಿ ತಮಿಳುನಾಡು ವಿರೋಧಿಸುತ್ತಿದೆ. ಈ ರೀತಿಯ ಧೋರಣೆ ಸರಿಯಾದ ಕ್ರಮವಲ್ಲ ಎಂದು ಅವರು ಹೇಳಿದರು.
ಮೇಕೆದಾಟು ವಿಷಯದಲ್ಲಿ ನಮ್ಮ ನಿಲುವಿಗೆ ನಾವು ಬದ್ದರಾಗಿರುತ್ತೇವೆ. ಅದರಲ್ಲಿ ಎರಡು ಮಾತಿಲ್ಲ ಎಂದು ಸ್ಪಷ್ಟಪಡಿಸಿದರು. ತಮಿಳುನಾಡು ಸರ್ಕಾರ ಪದೇ ಪದೇ ಇದೇ ರೀತಿ ಕ್ಯಾತೆ ತೆಗೆಯುವುದು ಮಾಮೂಲಿಯಾಗಿದೆ. ಅವರ ಈ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ ಎಂದು ಹೇಳಿದರು.